ಹುಬ್ಬಳ್ಳಿ: ಔಷಧಗಳ ದರ ಕಡಿಮೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಔಷಧ ಹಾಗೂ ಮಾರಾಟ ಪ್ರತಿನಿಧಿಗಳ ಸಂಘದಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಅಖಿಲ ಭಾರತ ಔಷಧ ಮಾರಾಟ ಪ್ರತಿನಿಧಿಗಳ ಸಂಘವು ರಾಷ್ಟ್ರವ್ಯಾಪಿ ಕರೆ ನೀಡಿದ್ದ ಮುಷ್ಕರವನ್ನು ಬೆಂಬಲಿಸಿ, ಚನ್ನಮ್ಮ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಂತರ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು.
‘ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಜೀವನಾವಶ್ಯ ಔಷಧಗಳ ಮೇಲೆ ಜಿ.ಎಸ್.ಟಿ. ವಿಧಿಸುತ್ತಿರುವುದರಿಂದ ಔಷಧಗಳ ಬೆಲೆ ಏರಿಕೆಯಾಗಿದೆ. ಸರ್ಕಾರಿ ಆಸ್ಪತ್ರೆಗಳನ್ನು ಪಿ.ಪಿ.ಪಿ. (ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವ) ಹೆಸರಿನಲ್ಲಿ ಖಾಸಗೀಕರಣ ಮಾಡುತ್ತಿರುವುದು ಸರಿಯಲ್ಲ. ಔಷಧಗಳನ್ನು ಉತ್ಪಾದಿಸಿ, ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆ ಮಾಡುವ ಘಟಕಗಳ ಷೇರುಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.
‘ಖಾಸಗಿ ಕಂಪನಿಗಳು ಹೆಚ್ಚಿಸಿರುವ ಔಷಧ ದರವನ್ನು ಕಡಿಮೆ ಮಾಡಬೇಕು. ಔಷಧ ಮಾರಾಟ ಪ್ರತಿನಿಧಿಗಳಿಗೆ ಕನಿಷ್ಠವೇತನ, ಸಾಮಾಜಿಕ ಭದ್ರತೆ ಒದಗಿಸಬೇಕು. ಸೇವಾ ಷರತ್ತು ಮತ್ತು ಕೆಲಸದ ಅವಧಿ ನಿಗದಿ ಮಾಡಬೇಕು. ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಪ್ರತಿನಿಧಿಗಳ ಪ್ರವೇಶಕ್ಕೆ ನಿರ್ಬಂಧ ಹಾಕಬಾರದು. ಕಾರ್ಮಿಕ ಕಾನೂನು ಉಲ್ಲಂಘನೆ ನಿಲ್ಲಬೇಕು’ ಎಂದು ಆಗ್ರಹಿಸಿದರು.
ಸಂಘದ ರಾಜ್ಯ ಕಾರ್ಯದರ್ಶಿ ಪ್ರವೀಣ್ ಕುಮಾರ್ ಶಿವಶಿಂಪರ್, ಹುಬ್ಬಳ್ಳಿ ಘಟಕದ ಅಧ್ಯಕ್ಷ ರಮೇಶ ಹಿರೇಗೌಡರ, ಕಾರ್ಯದರ್ಶಿ ಮಂಜುನಾಥ ಹೊಸಮಠ, ಖಜಾಂಚಿ ಕಾರ್ತಿಕ ಹಂಚ್ಚೊಳ್ಳಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.