ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಅಮಾನವೀಯ ಘಟನೆ. ಈ ರೀತಿ ಕೊಲೆ ಮಾಡಲು ಯಾರಿಗೂ ಅಧಿಕಾರ ಇಲ್ಲ. ಕಾನೂನಿನ ಮುಂದೆ ನಟರು , ರಾಜಕಾರಣಿಗಳು ಎಲ್ಲರೂ ಒಂದೇ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಆದರೂ ಕಾನೂನು ಕೈಗೆ ತೆಗೆದುಕೊಳ್ಳುವುದು ಅಪರಾಧ ಎಂದರು.
ಇದು ಗಂಭೀರವಾದ ಪ್ರಕರಣ. ಸದ್ಯ ಪೊಲೀಸರು ಚುರುಕಾಗಿ ತನಿಖೆ ಮಾಡುತ್ತಿದ್ದಾರೆ. ಕೊನೆವರೆಗೂ ಚುರುಕಾಗಿ, ಕಾನೂನು ಬದ್ಧ, ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕು. ಆಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗಲು ಸಾಧ್ಯ ಎಂದು ಹೇಳಿದರು.
ಶಿಗ್ಗಾವಿ ಉಪಚುನಾವಣೆ ಕುರಿತು ಪ್ರತಿಕ್ರಿಯಿಸಿ, ಶಿಗ್ಗಾವಿ ಉಪಚುನಾವಣೆ ಪ್ರಕ್ರಿಯೆ ಇನ್ನು ಪ್ರಾರಂಭವಾಗಿಲ್ಲ. ನಾನು ಇನ್ನೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ನಾನು ಇನ್ನು ಶಿಗ್ಗಾವಿ ಕ್ಷೇತ್ರದ ಶಾಸಕ .
ರಾಜೀನಾಮೆ ಕೊಟ್ಟ ಮೇಲೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಯಾರಿಗೆ ಟಿಕೆಟ್ ನೀಡಬೇಕು ಎಂಬುದು ವರಿಷ್ಠರಿಗೆ ಬಿಟ್ಟ ವಿಷಯ. ಯಾರಿಗೆ ಟಿಕೆಟ್ ಕೊಟ್ಟರೂ ಪ್ರಾಮಾಣಿಕವಾಗಿ ಗೆಲ್ಲಿಸಿಕೊಂಡು ಬರಲು ಪ್ರಯತ್ನ ಮಾಡುತ್ತೇನೆ ಎಂದರು.
ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯಕ್ಕೆ ಸೂಕ್ತ ನ್ಯಾಯ ನೀಡಿದ್ದು, ಉತ್ತರ ಕರ್ನಾಟಕಕ್ಕೆ ಯಾವುದೇ ರೀತಿ ಅನ್ಯಾಯ ಆಗಿಲ್ಲ. ನಾನು ಸಚಿವ ಸ್ಥಾನಕ್ಕೆ ಆಕಾಂಕ್ಷಿ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.