ಹುಬ್ಬಳ್ಳಿ: ರೈಲುಗಳಲ್ಲಿ ಈಚೆಗೆ ಅಹಿತಕರ ಘಟನೆಗಳು ನಡೆದ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ವಲಯದ ಹುಬ್ಬಳ್ಳಿ ವಿಭಾಗದಲ್ಲಿ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷತೆಗಾಗಿ ಹಲವು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ರೈಲ್ವೆ ಭದ್ರತಾ ಪಡೆ ಹಾಗೂ ಪೊಲೀಸರು ನಿತ್ಯ 20 ಪ್ರಮುಖ ರೈಲುಗಳ ಭದ್ರತೆ ಪರಿಶೀಲಿಸುತ್ತಿದ್ದು, ಮತ್ತಷ್ಟು ರೈಲುಗಳ ಭದ್ರತೆ ಪರಿಶೀಲಿಸಲು ನಿರ್ಧರಿಸಲಾಗಿದೆ. ಹುಬ್ಬಳ್ಳಿ ಸೇರಿದಂತೆ ಬೆಳಗಾವಿ, ಬಳ್ಳಾರಿ, ವಿಜಯಪುರ, ಗದಗ, ವಿಜಯನಗರ, ಧಾರವಾಡದ ಆಗಮನ ಹಾಗೂ ನಿರ್ಗಮನ ತಾಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ನಿರಂತರವಾಗಿ ನಿಗಾ ವಹಿಸಲಾಗುತ್ತಿದೆ.
‘ರೈಲ್ ಮದದ್’ ಜಾಲತಾಣ ಹಾಗೂ ಪೊಲೀಸ್ ಠಾಣೆಯಲ್ಲಿ ಪ್ರಯಾಣಿಕರು ಹಾಗೂ ಸಿಬ್ಬಂದಿ ನೀಡುವ ದೂರುಗಳಿಗೆ ಶೀಘ್ರವಾಗಿ ಸ್ಪಂದಿಸಲಾಗುತ್ತಿದ್ದು, ಇದಕ್ಕಾಗಿ ಕಂಟ್ರೋಲ್ ರೂಂ ಸಹ ಸ್ಥಾಪಿಸಲಾಗಿದೆ.
ಭದ್ರತೆ ವಿಚಾರವಾಗಿ ಇಲಾಖೆಯ ಉನ್ನತಾಧಿಕಾರಿಗಳು ಎಲ್ಲ ಹಂತದ ಅಧಿಕಾರಗಳೊಂದಿಗೆ ಸಭೆ ನಡೆಸಿ, ಹೆಚ್ಚಿನ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.