ADVERTISEMENT

ರಾಜ್ಯ ಸರ್ಕಾರ ಆರ್ಥಿಕ ದಿವಾಳಿಯಾಗಿದೆ; ಶೆಟ್ಟರ್ ಟೀಕೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2024, 15:47 IST
Last Updated 15 ಸೆಪ್ಟೆಂಬರ್ 2024, 15:47 IST
<div class="paragraphs"><p>ಜಗದೀಶ ಶೆಟ್ಟರ್ </p></div>

ಜಗದೀಶ ಶೆಟ್ಟರ್

   

ಹುಬ್ಬಳ್ಳಿ: ‘ಹಾಲು, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದು ರಾಜ್ಯ ಸರ್ಕಾರ ದಿವಾಳಿಯಾಗಿರುವುದಕ್ಕೆ ಸಾಕ್ಷಿ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ₹50 ಸಾವಿರ ಕೋಟಿಗೂ ಹೆಚ್ಚು ಹಣವನ್ನು ಸರ್ಕಾರ ವ್ಯಯ ಮಾಡುತ್ತಿದೆ. ಇದರಿಂದ ಆಡಳಿತ ನಡೆಸುವುದು ಕಷ್ಟವಾಗಿದೆ. ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲದಂತಾಗಿದೆ‘ ಎಂದರು. 

ADVERTISEMENT

‘ರಾಜ್ಯದಲ್ಲಿ ಕೋಮು ಗಲಭೆ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿ ಕಾರಣ. ನಾಗಮಂಗಲ ಘಟನೆಯಲ್ಲಿ ಸಂತ್ರಸ್ತರ ಮೇಲೆ ಪ್ರಕರಣ ದಾಖಲಿಸಿರುವುದು ಸರಿಯಲ್ಲ. ಇದು ಮುಂದುವರಿದರೆ ರಾಜ್ಯ ಸರ್ಕಾರದ ವಿರುದ್ಧ ಜನ ದಂಗೆ ಏಳುವ ದಿನ ದೂರವಿಲ್ಲ’ ಎಂದರು.

‘ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರ ಮನೆಯಲ್ಲಿ ನಡೆದ ಗಣೇಶ ಹಬ್ಬದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದಕ್ಕೆ ಕಾಂಗ್ರೆಸ್‌ ಅಪಾರ್ಥ ಕಲ್ಪಿಸುತ್ತಿರುವುದು ಸರಿಯಲ್ಲ. ಇದು ಕೀಳುಮಟ್ಟದ ರಾಜಕಾರಣ’ ಎಂದು ಹೇಳಿದರು.

‘ಸಾಂವಿಧಾನಿಕ ಹುದ್ದೆಯಲ್ಲಿ ಇರುವವರ ವೈಯಕ್ತಿಕ ಸಂಬಂಧ, ಪರಸ್ಪರ ಗೌರವ ಕೊಡುವುದರ ಬಗ್ಗೆ ಟೀಕೆ ಮಾಡಬಾರದು. ನಾನು ವೈಯಕ್ತಿಕವಾಗಿ ಹಲವು ನ್ಯಾಯಾಧೀಶರ ಮನೆಗಳಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ನಮ್ಮ ಕುಟುಂಬದ ಕಾರ್ಯಕ್ರಮಗಳಲ್ಲಿಯೂ ಅವರು ಭಾಗವಹಿಸಿದ್ದಾರೆ‘ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.