ADVERTISEMENT

ತನಿಖೆ ಆಗುವವರೆಗೆ ಇನ್ನೊಬ್ಬ ಒಬಿಸಿ ಸಿಎಂ ನೇಮಿಸಿ: ಜೋಶಿ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2024, 22:30 IST
Last Updated 31 ಆಗಸ್ಟ್ 2024, 22:30 IST
ಪ್ರಲ್ಹಾದ ಜೋಶಿ 
ಪ್ರಲ್ಹಾದ ಜೋಶಿ    

ಶಿರಹಟ್ಟಿ/ಲಕ್ಷ್ಮೇಶ್ವರ: ‘ಮುಡಾ ಪ್ರಕರಣದಲ್ಲಿ ತಪ್ಪು ಮಾಡಿ, ಜಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಕ್ಷಣೆ ಪಡೆಯುವುದು ಬೇಡ. ತನಿಖೆ ಆಗುವವರೆಗೆ ಮತ್ತೊಬ್ಬ ಹಿಂದುಳಿದ ವರ್ಗಗಳ (ಒಬಿಸಿ) ಮುಖ್ಯಮಂತ್ರಿಯನ್ನು ನೇಮಿಸಲಿ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು.

‘ಕಾಂಗ್ರೆಸ್‌ ಸರ್ಕಾರ ಬೀಳಿಸುವ ಉದ್ದೇಶ ಬಿಜೆಪಿಗೆ ಇಲ್ಲ. ರಾಜ್ಯದ ಜನ ಅವರಿಗೆ 136 ಸ್ಥಾನಗಳನ್ನು ನೀಡಿದ್ದಾರೆ. ನಾವು ಸರ್ಕಾರ ಕೆಡುವುವ ಪ್ರಯತ್ನ ಮಾಡುವುದಿಲ್ಲ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದರೂ ಕಾಂಗ್ರೆಸ್ ರಾಜ್ಯಪಾಲರ ವಿರುದ್ಧ ಹೋರಾಟಕ್ಕೆ ಮುಂದಾಗಿದೆ. ಇದು ರಾಜ್ಯಪಾಲರ ಮೇಲೆ ಒತ್ತಡ ಹಾಕುವ ಪ್ರವೃತ್ತಿ. ತನ್ನ ಮೇಲೆ ಆರೋಪ ಕೇಳಿ ಬಂದಾಗ ಕಾಂಗ್ರೆಸ್ ಈ ರೀತಿ ಒತ್ತಡ ಹೇರುವ ತಂತ್ರ ಅನುಸರಿಸಿಕೊಂಡು ಬಂದಿರುವುದು ಎಲ್ಲರಿಗೂ ತಿಳಿದ ವಿಷಯ’ ಎಂದು ಹೇಳಿದರು.

ADVERTISEMENT

‘ಹಂಸರಾಜ ಭಾರಧ್ವಾಜ್‌ ರಾಜ್ಯಪಾಲರಾಗಿದ್ದ ಸಂದರ್ಭದಲ್ಲಿ ಬಿ.ಎಸ್‌.ಯುಡಿಯೂರಪ್ಪ ಅವರ ವಿರುದ್ಧ ಆರೋಪ ಬಂದಿತ್ತು. ಆಗ ಇದೇ ಸಿದ್ದರಾಮಯ್ಯನವರು ಬಿಎಸ್‌ವೈ ವಿರುದ್ಧ ಹೋರಾಟಕ್ಕೆ ಇಳಿದಿದ್ದರು. ಇದೀಗ ಅವರ ವಿರುದ್ಧವೂ ಆರೋಪ ಕೇಳಿ ಬಂದಿದ್ದು, ಅವರು ತನಿಖೆ ಎದುರಿಸಲಿ’ ಎಂದು ಹೇಳಿದರು. 

ಎಚ್‌.ಡಿ.ಕುಮಾರಸ್ವಾಮಿ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ಕೊಡದ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ‘2005–06ರಲ್ಲೇ ನಡೆದ ಪ್ರಕರಣ ಅದು. 2013ರಲ್ಲಿ ಕಾಂಗ್ರೆಸ್‌ ಸರ್ಕಾರವೇ ಇತ್ತು. 2018ರಲ್ಲಿ ಅವರೇ ಕುಮಾರಸ್ವಾಮಿ ಅವರನ್ನು ಕರೆತಂದು ಮುಖ್ಯಮಂತ್ರಿ ಮಾಡಿದರು. ಜನ ಯಾವುದನ್ನೂ ಮರೆತಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.