ಹಾಸನ: ನಗರದಲ್ಲಿ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ತಗ್ಗ ಪ್ರದೇಶಗಳಲ್ಲಿ ನೀರು ನುಗ್ಗಿತ್ತು. ನಗರದ ಬಿಎಸ್ ಎನ್ ಎಲ್ಭವನದ ಬಳಿ ವಾಹನಗಳು ನೀರಿನಲ್ಲಿ ಮುಳುಗಿದ್ದವು.
ಬಿರುಗಾಳಿಯ ಜೊತೆಗೆ ಸುರಿದ ಮಳೆಯಿಂದ ಹಲವೆಡೆ ಮರ, ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಒಂದೂವರೆ ಗಂಟೆಗೂ ಅಧಿಕ ಸುರಿದ ಮಳೆಯಿಂದ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.
ನಗರದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು, ಒಂದು ಕಾರು ಜಖಂಗೊಂಡಿದೆ. ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಯಿತು.
ನಗರದ ಕೆಂಚಟ್ಟಳ್ಳಿಯಲ್ಲಿ ಹೆದ್ದಾರಿ ಪಕ್ಕದಲ್ಲಿರುವ ವಿದ್ಯುತ್ ಕಂಬಗಳು ರಸ್ತೆ ಕಡೆಗೆ ವಾಲಿದ್ದು, ವಿದ್ಯುತ್ ಸ್ಥಗಿತಗೊಳಿಸಲಾಗಿದೆ.
ನಗರದ ಕೆ.ಆರ್.ಪುರಂ ಸೇರಿದಂತೆ ಅನೇಕ ಬಡಾವಣೆಗಳಲ್ಲಿ ಮರದ ಕೊಂಬೆಗಳು ಬಿದ್ದಿದ್ದು, ಅಲ್ಲಲ್ಲಿ ವಿದ್ಯುತ್ ತಂತಿಗಳು ಹರಿದು ಬಿದ್ದಿವೆ. ಸೆಸ್ಕ್ ಸಿಬ್ಬಂದಿ ವಿದ್ಯುತ್ ಸಂಪರ್ಕ ಸರಿಪಡಿಸಲು ಹರಸಾಹಸ ಮಾಡುವಂತಾಯಿತು.
ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದ್ದು, ಶುಕ್ರವಾರ ಅಧಿಕ ಮಳೆಯಾಗಿದೆ. ಜೊತೆಗೆ ಗಾಳಿ ಜೋರಾಗಿ ಬೀಸಿದ್ದು, ಹೆಚ್ಚಿನ ತೊಂದರೆ ಉಂಟು ಮಾಡಿತ್ತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.