ಬ್ಯಾಡಗಿ: ಪಟ್ಟಣದ ಮುಖ್ಯರಸ್ತೆಯ ಮೂಲಕ ಹಾದು ಹೋಗಿರುವ ಗಜೇಂದ್ರಗಡ-ಸೊರಬ ರಾಜ್ಯ ಹೆದ್ದಾರಿ ವಿಸ್ತರಣೆ ವಿಳಂಬ ಖಂಡಿಸಿ ಹಳೇ ಪುರಸಭೆ ಎದುರು ಮುಖ್ಯ ರಸ್ತೆ ವಿಸ್ತರಣೆ ಹೋರಾಟ ಸಮಿತಿ ಸದಸ್ಯರು ಮಂಗಳವಾರ ಅನಿರ್ದಿಷ್ಟಾವಧಿ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದರು.
ಸಮಿತಿ ಅಧ್ಯಕ್ಷ ಸುರೇಶ ಛಲವಾದಿ ಮಾತನಾಡಿ, ‘ಸಾರ್ವಜನಿಕರ ಹಿತದೃಷ್ಠಿಯಿಂದ ಮುಖ್ಯರಸ್ತೆ ವಿಸ್ತರಣೆ ಮಾಡುವಂತೆ 14 ವರ್ಷಗಳಿಂದ ವಿವಿಧ ರೀತಿಯ ಹೋರಾಟ ಮಾಡಲಾಗಿದೆ. ಆದರೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಭೂಸ್ವಾಧೀನ ಪ್ರಕ್ರಿಯೆ ವಿಳಂಭವಾಗಿದೆ. ಸದ್ಯ ಭೂಸ್ವಾಧೀನ ಪ್ರಕ್ರಿಯೆಗೆ ಪೂರ್ವ ಅಧಿಸೂಚನೆ ಹೊರಡಿಸಿದ್ದರೂ ಅಧಿಕಾರಿಗಳು ಮುಂದೂಡುತ್ತಿದ್ದಾರೆ’ ಎಂದು ಆರೋಪಿಸಿದರು.
‘ಕಿರಿದಾದ ರಸ್ತೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಕೂಡಲೇ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ರಸ್ತೆ ವಿಸ್ತರಣೆಗೆ ಮುಂದಾಗಬೇಕು’ ಎಂದು ಆಗ್ರಹಿಸಿದರು.
ವಕೀಲರ ಸಂಘ, ರೈತ ಸಂಘ ಸೇರಿದಂತೆ ಹಲವಾರು ಸಂಘ–ಸಂಸ್ಥೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿದವು. ಸಮಿತಿ ಸದಸ್ಯರಾದ ಕಿರಣಕುಮಾರ ಎಂ.ಎಲ್., ಪಾಂಡುರಂಗ ಸುತಾರ, ರೈತ ಮುಖಂಡ ಕೆ.ವಿ. ದೊಡ್ಡಗೌಡ್ರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.