ಬ್ಯಾಡಗಿ: ತಾಲ್ಲೂಕಿನ ಆಣೂರು, ಬುಡಪನಹಳ್ಳಿ ಹಾಗೂ ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನಾ ವ್ಯಾಪ್ತಿಯ ಕ್ಷೇತ್ರದಲ್ಲಿ ಬಿತ್ತನೆ ಪೂರ್ಣಗೊಂಡಿದ್ದು, ಬೆಳೆ ಉಳಿಸಿಕೊಳ್ಳಲು ನೀರು ಪೂರೈಕೆಗೆ ಚಾಲನೆ ನೀಡುವ ಮೂಲಕ ಕೆರೆಗಳನ್ನು ತುಂಬಿಸುವಂತೆ ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಆಗ್ರಹಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿಯ ಕಾರಣಗಳಿಂದ ಕಳೆದೆರಡು ವರ್ಷಗಳಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. ಕಳೆದ ವರ್ಷ ಅನುಷ್ಟಾನಗೊಂಡಿರುವ ಏತ ನೀರಾವರಿ ಯೋಜನೆಗಳ ಮೂಲಕ ಒಂದಿಷ್ಟು ಕೆರೆಗಳನ್ನು ತುಂಬಿಸಲು ಸಾಧ್ಯವಾಗಿಲ್ಲ. ಪ್ರಸಕ್ತ ಮುಂಗಾರು ಚುರುಕಾಗಿದ್ದು, ತುಂಗಭದ್ರಾ, ವರದಾ ನದಿಗಳಲ್ಲಿ ನೀರು ಹರಿಯುತ್ತಿದೆ. ಜಾಕ್ವೆಲ್ಗಳ ಮೂಲಕ ಕೆರೆಗೆ ನೀರು ಪೂರೈಸಬೇಕು’ ಎಂದು ಒತ್ತಾಯಿಸಿದರು.
‘ತಾಲ್ಲೂಕಿನ ಬಹುತೇಕ ಕೆರೆಗಳಲ್ಲಿ ಹೂಳು ತುಂಬಿವೆ. ಗುಡ್ಡದ ಮಲ್ಲಾಪುರ ಯೋಜನಯಡಿ ಬರುವ ಕಾಲುವೆಗಳು ಒಡೆದಿದ್ದು ಅವುಗಳ ದುರಸ್ತಿ ಕಾರ್ಯ ನಡೆಯಬೇಕು. ನದಿ ನೀರಿನಿಂದ ಕೆರೆಗಳನ್ನು ತುಂಬಿಸಿದಲ್ಲಿ ಕೊಳವೆ ಬಾವಿಗಳು ಪುನಶ್ಛೇತನಗೊಳ್ಳುತ್ತವೆ. ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಖಾಲಿಯಾಗಿರುವ ಕೆರಗಳನ್ನು ತುಂಬಿಸಿದಂತಾಗುತ್ತದೆ. ಕಾರಣ ನೀರಾವರಿ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ನೀರು ಪೂರೈಕಗೆ ಮುಂದಾಗಬೇಕು’ ಎಂದು ಆಗ್ರಹಿಸಿದರು.
‘ವಿಳಂಬ ಮಾಡಿದರೆ ರೈತರು ಬೀದಿಗಿಳಿದು ಹೋರಾಟ ನಡೆಸಬೇಕಾಗತ್ತದೆ’ ಎಂದು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.