ADVERTISEMENT

ಬೀದಿ ಬದಿ ವ್ಯಾಪಾರಿಗಳಿಗೆ ಜಾಮೀನು ರಹಿತ ಸಾಲ ಸೌಲಭ್ಯ: ಶಾಸಕ ಬಸವರಾಜ ಶಿವಣ್ಣನವರ

​ಪ್ರಜಾವಾಣಿ ವಾರ್ತೆ
Published 8 ಜುಲೈ 2024, 15:53 IST
Last Updated 8 ಜುಲೈ 2024, 15:53 IST
ಬ್ಯಾಡಗಿಯಲ್ಲಿ ಶಾಸಕ ಬಸವರಾಜ ಶಿವಣ್ಣನವರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಪೋನ್‌ಗಳನ್ನು ವಿತರಿಸಿದರು
ಬ್ಯಾಡಗಿಯಲ್ಲಿ ಶಾಸಕ ಬಸವರಾಜ ಶಿವಣ್ಣನವರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಪೋನ್‌ಗಳನ್ನು ವಿತರಿಸಿದರು    

ಬ್ಯಾಡಗಿ: ‘ಸರ್ಕಾರದ ಸೌಲಭ್ಯಗಳು ಸಮಾಜದ ಎಲ್ಲಾ ವ್ಯಕ್ತಿಗಳಿಗೂ ತಲುಪಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ಒದಗಿಸಲಾಗುತ್ತಿದೆ’ ಎಂದು ರಾಜ್ಯ ಅರಣ್ಯ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಪಟ್ಟಣದ ಪುರಸಭೆ ಆವರಣದಲ್ಲಿ ಕೇಂದ್ರ ಸರ್ಕಾರದ ಕೌಶಲಾಭಿವೃದ್ಧಿ ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಆಶ್ರಯದಲ್ಲಿ ದೀನದಯಾಳ್ ಅಂತ್ಯೋದಯನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ₹1ಕೋಟಿಗೂ ಅಧಿಕ ಮೊತ್ತದ ಸಾಲ ಸೌಲಭ್ಯದ ಆದೇಶ ಪ್ರತಿಗಳನ್ನು ನೀಡುವ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಬಡ ಕುಟುಂಬದ ಹಿನ್ನೆಲೆ ಇರುವ ಬೀದಿಬದಿ ವ್ಯಾಪಾರಿಗಳಿಗೆ ಬ್ಯಾಂಕ್ ಹಾಗೂ ಇನ್ನಿತರ ಹಣಕಾಸು ಸಂಸ್ಥೆಗಳು ಸಾಲ ಸೌಲಭ್ಯವನ್ನು ನೀಡುತ್ತಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಪ್ರತ್ಯೇಕ ಇಲಾಖೆಯನ್ನು ಆರಂಭಿಸಿ, ಸ್ಥಳೀಯ ಸರ್ಕಾರಗಳ ಸಹಭಾಗಿತ್ವದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದೊಂದು ಜಾಮೀನನು ರಹಿತ ಸಾಲವಾಗಿದ್ದು, ಮಹಿಳಾ ಸಂಘಗಳಿಗೂ ಇದನ್ನು ವಿಸ್ತರಿಸಲಾಗಿದೆ.
ಪಡೆದ ಸಾಲವನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು’ ಎಂದು ಅವರು ಮನವಿ ಮಾಡಿದರು.

ADVERTISEMENT

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ದಾನಪ್ಪ ಚೂರಿ, ಪುರಸಭೆ ಸದಸ್ಯರಾದ ಫಕ್ಕೀರಮ್ಮ ಛಲವಾದಿ, ಕಲಾವತಿ ಬಡಿಗೇರ, ಸರೋಜಾ ಉಳ್ಳಾಗಡ್ಡಿ, ಗಾಯತ್ರಿ ರಾಯ್ಕರ, ಕವಿತಾ ಸೊಪ್ಪಿನಮಠ, ರಾಮಣ್ಣ ಕೋಡಿಹಳ್ಳಿ, ಚಂದ್ರಣ್ಣ ಶೆಟ್ಟರ, ಬಸವಣ್ಣೆಪ್ಪ ಛತ್ರದ, ಈರಣ್ಣ ಬಣಕಾರ,ಮುಖಂಡರಾದ ರಮೇಶ ಸುತ್ತಕೋಟಿ, ಸೋಮಣ್ಣ ಸಂಕಣ್ಣನವರ ಮತ್ತು ಪಟ್ಟಣದ ವಿವಿಧ ಬ್ಯಾಂಕ್‌ಗಳ ವ್ಯವಸ್ಥಾಪಕರು ಪಾಲ್ಗೊಂಡಿದ್ದರು.

ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಹೊಳಿಯಪ್ಪಗೋಳ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಬ್ಬಂದಿ ಮಲ್ಲಿಕಾರ್ಜುನ ಯಲ್ಲಣ್ಣನವರ, ಮಾರುತಿ ಪಾಟೀಲ ಸಂಗಮೇಶ ಹಾದಿಮನಿ ಇದ್ದರು.

ಸ್ಮಾರ್ಟ್‌ ಪೋನ್‌ ವಿತರಣೆ: ಪಟ್ಟಣದ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ತಾಲ್ಲೂಕಿನ 166 ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಪೋನ್‌ಗಳನ್ನು ಶಾಸಕ ಬಸವರಾಜ ಶಿವಣ್ಣನವರ ಸೋಮವಾರ ಸಾಂಕೇತಿಕವಾಗಿ ವಿತರಿಸಿದರು.

ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮಕ್ಕೂ ಮೊದಲ ಅರಣ್ಯ ಇಲಾಖೆಯಿಂದ ವನಮೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಶಿವಣ್ಣನವರ ಎಸ್‌ಜೆಜೆಎಂ ಕರ್ನಾಟಕ ಪಬ್ಲಿಕ್‌ ಶಾಲೆಯ ಆವರಣದಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸುವ ವಿವಿಧ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.