ಶಿಗ್ಗಾವಿ: ’ಶಿಗ್ಗಾವಿ–ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನೂ ಆಕಾಂಕ್ಷಿ. ಕಾಂಗ್ರೆಸ್ ಪಕ್ಷ ಈ ಬಾರಿ ನನಗೆ ಟಿಕೆಟ್ ನೀಡಿ ಮಹಿಳೆಯರಿಗೆ ಆದ್ಯತೆ ನೀಡಬೇಕು. ಗೆಲ್ಲುವ ವಿಶ್ವಾಸ ನನಗಿದೆ’ ಎಂದು ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ಪಾಟೀಲ ಹೇಳಿದರು.
ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ’ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿ ಮತ್ತು ಕಾಂಗ್ರೆಸ್ ಪಕ್ಷದ ಜಿಲ್ಲಾ ಮಹಿಳಾ ಘಟಕದ ಅದ್ಯಕ್ಷೆಯಾಗಿ, ಎಪಿಎಂಸಿ ಅಧ್ಯಕ್ಷೆಯಾಗಿ ಕೆಲಸ ಮಾಡಿದ್ದೇನೆ. ಪಕ್ಷ ವಹಿಸಿದ್ದ ಜವಾಬ್ದಾರಿ ನಿಭಾಯಿಸಿದ್ದೇನೆ’ ಎಂದರು.
’ಕಾಂಗ್ರೆಸ್ ಪಕ್ಷ ಈ ಕ್ಷೇತ್ರದಲ್ಲಿ ಮಹಿಳೆಯರಿಗೆ ಅವಕಾಶ ನೀಡಿಲ್ಲ. ಈ ಬಾರಿಯಾದರೂ ಮಹಿಳೆಗೆ ಅವಕಾಶ ನೀಡಬೇಕು. ಮುಸ್ಲಿಂ ಸಮುದಾಯಕ್ಕೆ 4 ಭಾರಿ ಟಿಕೆಟ್ ನೀಡಿದರೂ ಪಕ್ಷ ಸೋತಿದೆ’ ಎಂದರು.
ಶಹರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಸೂಯಾ ಬಳಿಗಾರ, ಮುಖಂಡರಾದ ರೇಣುಕಾ ಗುಳೇದ, ಚಿನ್ನವ್ವ ಕುಂದೂರ, ಶಾಂತವ್ವ ಗುಳೇದ, ಮಂಜುಳಾ ಕಂಕಣವಾಡ, ಶೋಭಾ ಮೇವುಂಡಿ, ಫರವಿನಾ ಚಂದುಸಾಬನವರ ಪತ್ರಿಕಾಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.