ರಟ್ಟೀಹಳ್ಳಿ: ‘ಭಾರತೀಯರಾದ ನಾವೆಲ್ಲರೂ ಜಾತಿ, ಮತ, ಪಂಥವೆಂದು ತಾರತಮ್ಯ ಮಾಡದೆ, ಸಮಾನತೆ, ಸಹಬಾಳ್ವೆಯಿಂದ ಜೀವನ ಸಾಗಿಸಬೇಕು. ಆಗ ಮಾತ್ರ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಹೋರಾಟಗಾರರ ಶ್ರಮ ಸಾರ್ಥಕವಾಗಲು ಸಾಧ್ಯ’ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಕಲ್ಯಾಣಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ಸಂವಿಧಾನ ಜಾಗೃತಿ ಜಾಥಾ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಾವೇಶದಲ್ಲಿ ಮಾತನಾಡಿದರು.
‘ದೇಶದ ಪ್ರತಿಯೊಬ್ಬ ನಾಗರಿಕನಿಗೆ ಶೈಕ್ಷಣಿಕ, ಆರ್ಥಿಕ, ಧಾರ್ಮಿಕ ಸ್ವಾತಂತ್ರ್ಯ ಪಡೆಯಲು ಸಂವಿಧಾನದಲ್ಲಿ ಅವಕಾಶವಿದೆ. ಅದರಂತೆ ಹಕ್ಕು ಮತ್ತು ಕರ್ತವ್ಯಗಳನ್ನೂ ಉಲ್ಲೇಖಿಸಲಾಗಿದ್ದು, ಎಲ್ಲರೂ ಪರಿಪಾಲಿಸಬೇಕು’ ಎಂದರು.
‘ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ರಾಜ್ಯದ ಬಡಜನರ ಕಲ್ಯಾಣಕ್ಕಾಗಿ ಅನುಷ್ಠಾನಗೊಂಡಿವೆ. ದೇಶದಲ್ಲೇ ಕರ್ನಾಟಕ ಮಾದರಿಯಾಗಿದೆ. ಎಷ್ಟೇ ಆರ್ಥಿಕ ಹೊರೆಯಾದರೂ ಸರ್ಕಾರ ಬಡವರ ಅಭಿವೃದ್ಧಿ ನಿಟ್ಟಿನಲ್ಲಿ ಯೋಜನೆಗಳನ್ನು ಜಾರಿಗೊಳಿಸಿದೆ’ ಎಂದು ಹೇಳಿದರು.
ಪ್ರಸ್ತಾವಿಕ ನುಡಿಗಳನ್ನಾಡಿದ ತಹಶೀಲ್ದಾರ್ ಕೆ. ಗುರುಬಸವರಾಜ, ‘ಸಂವಿಧಾನ ಓದಿ ಅರ್ಥೈಸಿಕೊಳ್ಳಬೇಕು. ಸರ್ಕಾರ ಬಡವರ ಪ್ರಗತಿಗಾಗಿ ಜಾರಿಮಾಡಿದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು’ ಎಂದರು.
ಗೃಹಲಕ್ಷ್ಮಿ ಯೋಜನೆ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಜಯಶ್ರೀ ಪಾಟೀಲ, ಹಕ್ಕು ಮತ್ತು ಕರ್ತವ್ಯಗಳ ಕುರಿತು ಉಪನ್ಯಾಸಕ ಎಸ್.ಪಿ. ಬೆನಕನಕೊಂಡ ಮಾಹಿತಿ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಧರ ಎನ್., ಸಮಾಜ ಕಲ್ಯಾಣಾಧಿಕಾರಿ ಎಂ.ಎಫ್. ನಧಾಫ್, ಕೆ.ಎಸ್. ವಡ್ಡಿನಕಟ್ಟಿ, ಚೈತನ್ಯಕುಮಾರ, ಸಿಡಿಪಿಒ ಜಯಶ್ರೀ ಪಾಟೀಲ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಸಂತೋಷ ಚಂದ್ರಿಕೇರ, ಪಿ.ಡಿ. ಬಸನಗೌಡ್ರ, ವಸಂತ ದ್ಯಾವಕ್ಕಳವರ, ಪರಮೇಶಪ್ಪ ಕಟ್ಟೇಕಾರ, ಡಿಪೋ ಮ್ಯಾನೇಜರ, ಮಂಜುನಾಥ ಉಪಸ್ಥಿತರಿದ್ದರು.
ಸಭೆಗೂ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂವಿಧಾನ ಜಾಗೃತಿ ರಥ ಸಂಚರಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.