ಶಿಗ್ಗಾವಿ: ’ನಾನು ಕೃಷಿ ಕುಟುಂಬದ ರೈತ ಮಹಿಳೆ. ಕಾಂಗ್ರೆಸ್ ಪಕ್ಷ ನೀಡಿದ್ದ ಎಲ್ಲ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಿದ್ದೇನೆ. ಭಾವೈಕ್ಯತೆಗೆ ಹೆಸರಾದ ಮಾಮ್ಲೆದೇಸಾಯಿ ಮನೆತನದ ನನಗೆ ಟಿಕೆಟ್ ನೀಡಿದರೆ, ಶಿಗ್ಗಾವಿ–ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ ವೀ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ’2013ರ ಚುನಾವಣೆ ಸಂದರ್ಭದಲ್ಲಿ ಪಕ್ಷದ ಸಂಘಟನೆ ಮಾಡಿದ್ದೆ. ಲೋಕಸಭೆ ಚುನಾವಣೆಯಲ್ಲೂ ಪಕ್ಷದ ಸಂಘಟನೆ ಮಾಡಿ, ಪಕ್ಷಕ್ಕೆ ಹೆಚ್ಚು ಮತಗಳು ಬರುವಂತೆ ನೋಡಿಕೊಂಡಿದ್ದೇನೆ’ ಎಂದರು.
’ನಾನು ಸವಣೂರಿನವಳು. ನನ್ನ ಕುಟುಂಬ ಸ್ವಾತಂತ್ರ್ಯ ಹೋರಾಟಗಾರರಿಗೆ ಹೆಸರುವಾಸಿ. ನನಗೆ ಕೃಷಿಕರು, ಕೃಷಿ ಮಹಿಳೆಯರು, ಸರ್ವ ಜನಾಂಗದವರು ಹಾಗೂ ಸರ್ವ ಧರ್ಮದವರ ಬೆಂಬಲವಿದೆ. ಶಿಕ್ಷಣ ಸಂಸ್ಥೆಗಳೊಂದಿಗೆ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೇನೆ’ ಎಂದರು.
’2018ರಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಆಗಿದ್ದೆ.ಈ ಕ್ಷೇತ್ರದಲ್ಲಿ ಮಹಿಳೆಯರಿಗೆ ಇದುವರೆಗೂ ಅವಕಾಶ ನೀಡಿಲ್ಲ. ಮುಸ್ಲಿಂ ಸಮುದಾಯಕ್ಕೆ 4 ಭಾರಿ ಟಿಕೆಟ್ ನೀಡಲಾಗಿತ್ತು. ಅದು ಪಕ್ಷ ಸೋಲಿಗೆ ಕಾರಣವಾಯಿತು. ವೀರಶೈವ ಲಿಂಗಾಯತ ಸಮುದಾಯದ ನನಗೆ ಟಿಕೆಟ್ ನೀಡಿದರೆ, ಗೆಲ್ಲುವ ಸಾಧಿಸುವ ಸಂಪೂರ್ಣ ವಿಶ್ವಾಸವಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.