ADVERTISEMENT

ರೈತರ ಪರವಾಗಿ ಜೈಲು ಸೇರಲು ಸಿದ್ಧ: ಬಿ.ಸಿ.ಪಾಟೀಲ ಎಚ್ಚರಿಕೆ

ಬೆಳೆ ವಿಮೆ ನೀಡದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ: ಬಿ.ಸಿ.ಪಾಟೀಲ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 15:04 IST
Last Updated 21 ಅಕ್ಟೋಬರ್ 2024, 15:04 IST
ಹಿರೇಕೆರೂರು ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಮಾಜಿ ಸಚಿವ ಬಿ.ಸಿ.ಪಾಟೀಲ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು
ಹಿರೇಕೆರೂರು ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಮಾಜಿ ಸಚಿವ ಬಿ.ಸಿ.ಪಾಟೀಲ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು   

ಹಿರೇಕೆರೂರು: ‘ಅಧಿಕಾರಿಗಳ ನಿರ್ಲಕ್ಷ ಹಾಗೂ ಸಾಂಖ್ಯಿಕ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ರಟ್ಟೀಹಳ್ಳಿ ಹಾಗೂ ಹಿರೇಕೆರೂರು ತಾಲ್ಲೂಕಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಧಿಕಾರಿಗಳ ನಿರ್ಲಕ್ಷ ದೋರಣೆ ಮುಂದುವರೆದಲ್ಲಿ  ಹೋರಾಟ ಮಾಡಿ ರೈತರ ಪರವಾಗಿ ಜೈಲು ಸೇರಲು ಸಿದ್ಧನಿದ್ದೇನೆ’ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಹಿರೇಕೆರೂರು ಮತ್ತು ರಟ್ಟೀಹಳ್ಳಿ ತಾಲ್ಲೂಕಿನ 20 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ರೈತರಿಗೆ 2023-24 ನೇ ಸಾಲಿನ ಬೆಳೆವಿಮೆ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆಯಲ್ಲಿ ಮಾತನಾಡಿದರು.

‘ತಾಲ್ಲೂಕಿನ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದರಿಂದ ,ರೈತರು ಬೆಳೆವಿಮೆಯಿಂದ ವಂಚಿತರಾಗಿದ್ದಾರೆ. 2023-24ನೇ ಸಾಲಿನಲ್ಲಿ ಬೆಳೆಗಳಿಂದ ನಿರೀಕ್ಷಿತ ಫಸಲು ಬಂದಿಲ್ಲ ಎಂಬುದು ಎಲ್ಲರ ಕಣ್ಣಿಗೂ ಕಾಣುವ ಸತ್ಯ. ಆದರೆ ತಾಲ್ಲೂಕಿನ 10 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಳ್ಳೆಯ ಬೆಳೆ ಆಗಿದೆ ಎಂದು ವರದಿ ಕೊಟ್ಟಿರುವ ಪರಿಣಾಮ ವಿಮೆ ಕಟ್ಟಿರುವ ರೈತರಿಗೆ ಬಿಡಿಗಾಸು ಬಂದಿಲ್ಲ ಇದ್ದಕ್ಕೆ ಅಧಿಕಾರಿಗಳೇ ಹೊಣೆ’ ಎಂದರು.

ADVERTISEMENT

‘ಅಧಿಕಾರಿಗಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳೆದ ಮೆಕ್ಕೆಜೋಳಕ್ಕೆ ಯಾವುದೇ ಹಾನಿಯಾಗಿಲ್ಲ, ಪೂರ್ಣ ಪ್ರಮಾಣದ ಫಸಲು ಬಂದಿದೆ ಎಂಬ ವರದಿ ನೀಡಲಾಗಿದೆ. ಹೀಗಾಗಿ ತಾಲ್ಲೂಕಿನ ಸುಮಾರು 30 ಸಾವಿರಕ್ಕೂ ಹೆಚ್ಚು ರೈತರಿಗೆ ವಿಮೆ ಬಂದಿಲ್ಲ. ರೈತರಿಗೆ ಆದ ಅನ್ಯಾಯದಲ್ಲಿ ಕಿರಿಯ ಅಧಿಕಾಗಳಿಂದ ಹಿಡಿದು ಹಿರಿಯ ಅಧಿಕಾರಿಗಳ ನಿರ್ಲಕ್ಷ ಎದ್ದು ಕಾಣುತ್ತಿದೆ. ನನ್ನ ಅಧಿಕಾರ ಅವಧಿಯಲ್ಲಿ ರೈತರಿಗೆ ಯಾವುದೇ ಅನ್ಯಾಯ ಆಗಲು ಬಿಟ್ಟಿಲ್ಲ ಈಗೂ ಸಹ ಬಿಡುವದಿಲ್ಲ’ ಎಂದು ಹೇಳಿದರು.

‘ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಸದ್ಯ 15-20 ದಿನಗಳಿಂದ ಸತತವಾಗಿ ಮಳೆ ಸುರಿಯುತ್ತದ್ದು, ಹೊಲದಲ್ಲಿನ ಮೆಕ್ಕೆಜೋಳ ಮಳೆಯಿಂದ ಅಲ್ಲಿಯೇ ಮೊಳಕೆ ಒಡೆದು ಹಾಳಗುತ್ತಿದೆ. ಈ ವರ್ಷವೂ ರೈತರಿಗೆ ಪಸಲು ಸಿಗುವುದು ಅನುಮಾನ. ತಕ್ಷಣ ಅಧಿಕಾರಿಗಳು ತಮ್ಮ ಎಲ್ಲ ಕೆಲಸಗಳನ್ನು ಬದಿಗಿಟ್ಟು ರೈತರ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬೆಳೆ ಹಾನಿಯಾದ ರೈತರಿಗೆ ಪರಿಹಾರ ನೀಡಲು ಮುಂದಾಗಬೇಕು. ಇಲ್ಲದಿದ್ದಲ್ಲಿ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಮಾಜಿ ಮುಖ್ಯ ಸಚೇತಕ ಡಿ.ಎಂ.ಸಾಲಿ,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಎಂ, ಈಟೇರ, ಲಿಂಗರಾಜ ಚಪ್ಪರದಹಳ್ಳಿ, ರವಿಶಂಕರ ಬಾಳಿಕಾಯಿ, ಪರಮೇಶಪ್ಪ ಹಲಗೇರಿ, ಶಿವಕುಮಾರ ತಿಪ್ಪಶೇಟ್ಟಿ, ದೇವರಾಜ ನಾಗಣ್ಣನವರ, ಜಗದೀಶ ದೊಡ್ಡಗೌಡ್ರ,ಮಾಲತೇಶ ಗಂಗೋಳ,ಆನಂದಪ್ಪ ಹಾದಿಮನಿ ಸೇರಿದಂತೆ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.