ಹಾವೇರಿ: ‘ಸವಿತಾ ಮಹರ್ಷಿ ಕ್ಷೌರಿಕ ಸಮಾಜದ ಮೂಲ ಪುರುಷರು. ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಸವಿತಾ ಸಮಾಜ ತನ್ನದೇ ಆದ ಪರಂಪರೆ ಹೊಂದಿದೆ’ ಎಂದು ಸವಿತಾನಂದನಾಥ ಸ್ವಾಮೀಜಿ ಅವರು ಹೇಳಿದರು.
ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಾವೇರಿ ಜಿಲ್ಲಾ ಸವಿತಾ ಸಮಾಜ ಸಹಯೋಗದಲ್ಲಿ ಜರುಗಿದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
‘ರಾಷ್ಟ್ರಕೂಟ, ವಿಜಯನಗರ ಕಲ್ಯಾಣ ಚಾಲುಕ್ಯರ ಶಾಸನಗಳಲ್ಲಿ ಸವಿತಾ ಸಮಾಜದ ಬಗ್ಗೆ ಉಲ್ಲೇಖವಿದೆ. ಅನೇಕ ಶಾಸನಗಳಲ್ಲಿ ಸವಿತಾ ಸಮಾಜದ ಸಾಧನಗಳಾದ ಕತ್ತಿ, ಕನ್ನಡಿ ಹಾಗೂ ಕತ್ತರಿಗಳನ್ನು ಕೆತ್ತಲಾಗಿದೆ. ಎರಡು ಸಾವಿರ ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಸವಿತಾ ಸಮಾಜ ಸೇವಾ ಕಾರ್ಯದಿಂದಲೇ ಹೆಸರುವಾಸಿಯಾಗಿದೆ’ ಎಂದರು.
‘ಸವಿತಾ ಮಹರ್ಷಿ ಜಯಂತಿ ಆಚರಣೆಯಿಂದ ಸಮುದಾಯದ ಜನರನ್ನು ಸಂಘಟಿಸಲು ಸಹಾಯವಾಗುತ್ತದೆ. ಕಡಿಮೆ ಜನಸಂಖ್ಯೆ ಹೊಂದಿರುವ ಸವಿತಾ ಸಮಾಜದವರು ಸಂಘಟಿತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದು ಕರೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ಚಿ.ಚಿನ್ನಿಕಟ್ಟಿ, ಸವಿತಾ ಮಹರ್ಷಿ ಸಂಘದ ಅಧ್ಯಕ್ಷ ಕೆ.ನಾಗರಾಜ, ಕೆ.ಇ.ಕಾಂತೇಶ ಹಾಗೂ ಸಮಾಜದ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.