ರಾಣೆಬೆನ್ನೂರು: ‘ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಣೆಬೆನ್ನೂರು ತಾಲ್ಲೂಕಿಗೆ ಜಿಲ್ಲೆಯಲ್ಲಿ ಮೂರನೇ ಸ್ಥಾನ ಬಂದಿರುವುದು ತೃಪ್ತಿ ಇಲ್ಲ. ಉತ್ತಮ ಫಲಿತಾಂಶದ ನಿರೀಕ್ಷೆಯಿತ್ತು. ಉತ್ತಮ ಮತ್ತು ಗುಣಮಟ್ಟದ ಫಲಿತಾಂಶಕ್ಕಾಗಿ ಈಗಿನಿಂದಲೇ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು’ ಎಂದು ಶಾಸಕ ಪ್ರಕಾಶ್ ಕೋಳಿವಾಡ ಹೇಳಿದರು.
ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯೊಂದಿಗೆ ಪಿಕೆಕೆ ಸಂಸ್ಥೆ ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ. ಜೊತೆಗೆ ಬಿಇಒ ಮತ್ತು ಶಿಕ್ಷಕರಿಗೂ ಗುಣಮಟ್ಟದ ಶಿಕ್ಷಣ ನೀಡಲು ಸೂಚಿಸಲಾಗುವುದು’ ಎಂದು ಹೇಳಿದರು.
‘ತಾಲ್ಲೂಕಿನ ಪ್ರತಿಯೊಂದು ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ಗೆ ಉತ್ತೇಜನ ನೀಡುವುದರ ಜೊತೆಗೆ ಶಿಕ್ಷಕರಿಗೆ ತರಬೇತಿ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ಉದ್ದೇಶ ಹೊಂದಿದೆ ಅದಕ್ಕಾಗಿ ಎಲ್ಲರೂ ಕೈಜೋಡಿಸಬೇಕು’ ಎಂದರು.
ವಿದ್ಯಾರ್ಥಿಗಳು ಹೇಗೆ ಓದಬೇಕು? ಪರೀಕ್ಷೆ ಹೇಗೆ ಎದುರಿಸಬೇಕು?ಎಂಬುದರ ಬಗ್ಗೆ ತರಬೇತಿ ನೀಡುವ ಆಲೋಚನೆ ಇದೆ. ಪಿಕೆಕೆ ಸಂಸ್ಥೆಯು ಕಳೆದ ಅನೇಕ ವರ್ಷಗಳಿಂದ ವಿದ್ಯಾರ್ಥಿಗಳಲ್ಲಿ ಉತ್ತೇಜನ ನೀಡುತ್ತಿದೆ. ಕೌಶಲ್ಯ ಆಧಾರಿತ ತರಬೇತಿ ನೀಡುವ ಯೋಜನೆ ಕೂಡ ರೂಪಿಸಿಕೊಳ್ಳುತ್ತಿದೆ ಎಂದರು.
ಶಾಸಕರಿಗೆ ದೊರೆಯುವ ಅನುದಾನದಲ್ಲಿ ಶೇಕ 90ರಷ್ಟು ಶಿಕ್ಷಣ ಇಲಾಖೆಗೆ ವಿನಯೋಗಿಸುವ ಹಂಬಲ ನನಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.