ಹಾನಗಲ್: ಅಯೋಧ್ಯೆ ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ತಾಲ್ಲೂಕಿನ ಶಿರಗೋಡ ಗ್ರಾಮದಲ್ಲಿ ಸೋಮವಾರ ಅಳವಡಿಸಲಾಗಿದ್ದ ರಾಮನ ಚಿತ್ರವಿರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ ಎಂದು ಗ್ರಾಮದಲ್ಲಿ ಕೆಲಹೊತ್ತು ಬಿಗುವಿನ ಸ್ಥಿತಿ ನಿರ್ಮಾಣವಾಗಿತ್ತು.
‘ಸೋಮವಾರ ರಾತ್ರಿ ಕೆಲ ಕಿಡಿಗೇಡಿಗಳು ಕೃತ್ಯವೆಸಗಿದ್ದು, ಅವರನ್ನು ಕೂಡಲೇ ಬಂಧಿಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹಾನಗಲ್ ಪಿಎಸ್ಐ ಯಲ್ಲಪ್ಪ ಹಿರಗಪ್ಪನವರ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸುವ ಕೆಲಸ ಮಾಡಿದರು. ಗ್ರಾಮಸ್ಥರೊಂದಿಗೆ ಚರ್ಚಿಸಿ, ಶಾಂತಿ ಸಭೆ ನಡೆಸಿದರು.
ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿಲ್ಲ.
‘ಘಟನೆ ಸಂಬಂಧ ದೂರು ನೀಡಿದರೆ ದಾಖಲಿಸಿಕೊಳ್ಳುತ್ತೇವೆ. ಸದ್ಯ ಗ್ರಾಮದಲ್ಲಿ ಪರಿಸ್ಥಿತಿ ಸಹಜವಾಗಿದೆ. ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ’ ಎಂದು ಪಿಎಸ್ಐ ಯಲ್ಲಪ್ಪ ಹಿರಗಪ್ಪನವರ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.