ಕಲಬುರಗಿ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಘನತ್ಯಾಜ್ಯ ನಿರ್ವಹಣೆ ಜವಾಬ್ದಾರಿ ಪಡೆದ ಮಹಿಳಾ ಒಕ್ಕೂಟದ ಸದಸ್ಯರಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಾಹನ ಚಾಲನಾ ತರಬೇತಿ ಪ್ರಮಾಣ ಪತ್ರ ಮತ್ತು ವಾಹನ ಚಾಲನಾ ಪರವಾನಗಿ ಕಾರ್ಡ್ ವಿತರಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿಯಿಂದ ಸಂಜೀವಿನಿ-ಎನ್.ಆರ್.ಎಲ್.ಎಂ.ಯೋಜನೆಯಡಿ ಜಿಲ್ಲೆಯ 35 ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ಸಚಿವರು ಸಾಂಕೇತಿಕವಾಗಿ 10 ಮಂದಿಗೆ ಪ್ರಮಾಣ ಪತ್ರ ವಿತರಿಸಿದರು.
ಗ್ರಾಮ ಪಂಚಾಯಿತಿಗಳು ಎನ್.ಆರ್.ಎಲ್.ಎಂ ಗ್ರಾಮ ಪಂಚಾಯಿತಿ ಮಟ್ಟದ ಮಹಿಳಾ ಒಕ್ಕೂಟಗಳ ಜೊತೆ ಘನತ್ಯಾಜ್ಯ ಕಾರ್ಯಚರಣೆ ಹಾಗೂ ನಿರ್ವಹಣೆಗಾಗಿ ಒಪ್ಪಂದ ಮಾಡಿಕೊಂಡ ಹಿನ್ನೆಲೆಯಲ್ಲಿ ಒಕ್ಕೂಟದ ಮಹಿಳಾ ಸದಸ್ಯರು ಗ್ರಾಮೀಣ ಭಾಗದಲ್ಲಿ ಕಸ ಸಂಗ್ರಹಣೆ ಮತ್ತು ಸ್ವಚ್ಛತಾ ವಾಹಿನಿಗಳನ್ನು ಚಲಾಯಿಸುವ ಜವಾಬ್ದಾರಿ ಪಡೆದಿದ್ದಾರೆ.
ಸದ್ಯ ಪ್ರಮಾಣ ಪತ್ರ ಪಡೆದ 35 ಮಹಿಳೆಯರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕೇಂದ್ರದ ಮೂಲಕ 30 ದಿನಗಳ ವಸತಿ ಸಹಿತ ವಾಹನ ಚಾಲನೆ ತರಬೇತಿ ನೀಡಲಾಗಿದೆ. ಇದೂವರೆಗೆ 179 ಮಹಿಳೆಯರು ಚಾಲನಾ ತರಬೇತಿ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಅಫಜಲಪುರ ಶಾಸಕ ಎಂ.ವೈ.ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಕುಡಾ ಮಜಹರ್ ಆಲಂ ಖಾನ್, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ, ಡಿ.ಆರ್.ಡಿ.ಎ. ಯೋಜನಾ ನಿರ್ದೇಶಕ ಜಗದೇವಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.