ADVERTISEMENT

ಕಲಬುರಗಿ | ಹೊರಗುತ್ತಿಗೆ ನೇಮಕಾತಿ ನಿಯಮ ಮಾರ್ಪಾಡಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 6:45 IST
Last Updated 7 ಜುಲೈ 2024, 6:45 IST
ದಲಿತ ಸಂಘರ್ಷ ಸಮಿತಿ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರಿಗೆ ಮನವಿ ಸಲ್ಲಿಸಿದರು
ದಲಿತ ಸಂಘರ್ಷ ಸಮಿತಿ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರಿಗೆ ಮನವಿ ಸಲ್ಲಿಸಿದರು   

ಕಲಬುರಗಿ: ರಾಜ್ಯ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ಅಳವಡಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ ನಿಯಮಗಳನ್ನು ಮಾರ್ಪಡಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ನಿಯಮಗಳನ್ನು ಅನ್ವಯಿಸಿ ನೇಮಕ ಪ್ರಕ್ರಿಯೆ ನಡೆಸಲು ಆದೇಶ ನೀಡಿರುವುದು ಸ್ವಾಗತಾರ್ಹ. ಆದರೆ, ಸುತ್ತೋಲೆಯ 1 ಮತ್ತು 6ನೇ ಷರತ್ತುಗಳು ಈ ಆದೇಶದ ಸದುದ್ದೇಶದ ಆಶಯಗಳಿಗೆ ವಿರುದ್ಧವಾಗಿಎ. 1ನೇ ಷರತ್ತಿನಲ್ಲಿ ಹೊರಗುತ್ತಿಗೆ ಮೀಸಲಾತಿ ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ ಎಂದಿದೆ. ಇದು ಮೀಸಲಾತಿ ವಿರೋಧಿಗಳಿಗೆ ಅನುಕೂಲವಾಗಿದ್ದು, ಇದನ್ನು ರದ್ದುಪಡಿಸಿ ಎಷ್ಟೇ ಅವಧಿಯ ನೇಮಕಾತಿ ಮಾಡಿಕೊಂಡರೂ ಮೀಸಲಾತಿ ಅನುಸರಿಸುವಂತೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

6ನೇ ಷರತ್ತಿನಲ್ಲಿ ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ಜಾರಿಗೊಳಿಸಬೇಕು ಎಂದಿರುವುದ ಅವೈಜ್ಞಾನಿಕವಾಗಿದೆ. ಮೀಸಲಾತಿ ವಿರೋಧಿಗಳು 20ಕ್ಕಿಂತ ಕಡಿಮೆ ಉದ್ಯೋಗಗಳನ್ನು ನಿಗದಿ ಮಾಡುತ್ತಾ ಹೋಗುತ್ತಾರೆ. ಆದ್ದರಿಂದ ಹುದ್ದೆಗಳ ಸಂಖ್ಯೆ ಎಷ್ಟೇ ಇರಲಿ, ಎಷ್ಟೇ ಅವಧಿಯದ್ದಾಗಿರಲಿ ಅಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ರೋಸ್ಟರ್ ನಿಯಮಗಳ ಅನುಸಾರವಾಗಿ ನೇಮಕಾತಿ ಪ್ರಕ್ರಿಯೆಗಳನ್ನು ಕಡ್ಡಾಯವಾಗಿ ಮಾಡಬೇಕು ಎಂದಿದ್ದಾರೆ. 

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರಿಗೆ ಮನವಿ ಸಲ್ಲಿಸಿದರು. ಡಿಎಸ್ಎಸ್ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ, ಜಿಲ್ಲಾ ಸಂಚಾಲಕ ಮರೆಪ್ಪ ಮೇತ್ರೆ, ಸಂಘಟನಾ ಸಂಚಾಲಕ ಶಿವಶರಣಪ್ಪ ಕುರನಳ್ಳಿ, ಜಯಕುಮಾರ ನೂಲಕರ, ರಮೇಶ ಕವಡೆ, ಸಂತೋಷ ತೆಗನೂರ, ಶಿವಕುಮಾರ ಸಂಗನ, ಮಲ್ಲಿಕಾರ್ಜುನ ಗೌಡ, ಮಲ್ಲಿಕಾರ್ಜುನ ಹಳ್ಳಿ, ಬಸವರಾಜ ದೊಡ್ಮನಿ, ಮಲ್ಲಣ್ಣ ಮರತೂರ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.