ಕಲಬುರಗಿ: ಜಾತ್ಯತೀತ ಜನತಾದಳ ಪಕ್ಷವನ್ನು ಪುನರ್ ರಚಿಸಿರುವ ಪಕ್ಷದ ಅಧ್ಯಕ್ಷರೂ ಆದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಪ್ರಧಾನ ಕಾರ್ಯದರ್ಶಿಯನ್ನಾಗಿ ಶಿವಕುಮಾರ ನಾಟೀಕಾರ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಬಾಲರಾಜ ಗುತ್ತೇದಾರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬಾಲರಾಜ ಅವರೇ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಪಕ್ಷದ ವಲಯದಲ್ಲಿ ಹರಿದಾಡುತ್ತಿತ್ತು. ಸೇಡಂ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಬಾಲರಾಜ ಅವರಿಗೆ ಇದೀಗ ಜಿಲ್ಲೆಯಲ್ಲಿ ಪಕ್ಷ ಸಂಘಟಿಸುವ ಹೊಣೆಯನ್ನು ನೀಡಲಾಗಿದೆ.
ಜೇವರ್ಗಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಗಿಂತ ಅತಿ ಹೆಚ್ಚು ಮತ ಪಡೆದು ಮತ ಗಳಿಕೆಯಲ್ಲಿ ಎರಡನೇ ಸ್ಥಾನ ಪಡೆದ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ಅವರಿಗೆ ಪಕ್ಷದ ಕಾರ್ಯಾಧ್ಯಕ್ಷ ಹುದ್ದೆಯನ್ನು ನೀಡಲಾಗಿದೆ.
ಜೊತೆಗೆ ಮುಂಬರುವ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನಾಗಿ ದೊಡ್ಡಪ್ಪಗೌಡ ಅವರನ್ನು ನೇಮಕ ಮಾಡಲಾಗಿದೆ. ಅವರ ತಂಡದಲ್ಲಿ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ, ಬಾಲರಾಜ ಗುತ್ತೇದಾರ ಹಾಗೂ ಅಶೋಕ ಗುತ್ತೇದಾರ ಅವರಿಗೆ ಸ್ಥಾನ ನೀಡಲಾಗಿದೆ.
ನೇಮಕಾತಿ ಕುರಿತು ‘ಪ್ರಜಾವಾಣಿ‘ಗೆ ಪ್ರತಿಕ್ರಿಯಿಸಿದ ಜೆಡಿಎಸ್ ನೂತನ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟೀಕಾರ, ‘ಪಕ್ಷದ ಅಧ್ಯಕ್ಷರು ನನ್ನ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿ ನೀಡಿದ್ದಾರೆ. ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದುಕೊಂಡು ಹೋಗುತ್ತೇನೆ‘ ಎಂದರು.
ಬಾಲರಾಜ ಗುತ್ತೇದಾರ ಅವರಿಗೆ ಬೆಂಗಳೂರಿನಲ್ಲಿ ಪಕ್ಷದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ನೇಮಕಾತಿ ಪತ್ರ ನೀಡಿ ಸನ್ಮಾನಿಸಿದರು.
ಮಾಜಿ ಸಚಿವ ಜಿ.ಟಿ. ದೇವೇಗೌಡ, ಮುಖಂಡರಾದ ಬಸವರಾಜ ಬಿರಬಿಟ್ಟಿ, ಶಾಮರಾವ್ ಸೂರನ್ ಈ ಸಂದರ್ಭದಲ್ಲಿದ್ದರು.
ಕೃಷ್ಣಾರೆಡ್ಡಿಗೆ ದೊರೆಯದ ಸ್ಥಾನ: ಕಲಬುರಗಿ ದಕ್ಷಿಣ ಮತಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆಡಿಎಸ್ ಮುಖಂಡ ಕೃಷ್ಣಾರೆಡ್ಡಿ ಅವರಿಗೆ ಯಾವುದೇ ಸ್ಥಾನ ನೀಡಿಲ್ಲ. ಮುಂಬರುವ ದಿನಗಳಲ್ಲಿ ಪಕ್ಷದ ಯುವ ಘಟಕದಲ್ಲಿ ಅವರಿಗೆ ಸ್ಥಾನ ದೊರೆಯಬಹುದು ಎಂದು ಪಕ್ಷದ ಮುಖಂಡರೊಬ್ಬರು ಮಾಹಿತಿ ನೀಡಿದರು.
ಕಳೆದ 25 ವರ್ಷಗಳಿಂದ ಜನರೊಂದಿಗೆ ಒಡನಾಟ ಇರುವುದನ್ನು ಗುರುತಿಸಿ ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರು ಗುರುತರ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಯಂತೆ ಕೆಲಸ ಮಾಡುವೆ- ದೊಡ್ಡಪ್ಪಗೌಡ ಪಾಟೀಲ ನರಿಬೋಳ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ
ಎಚ್.ಡಿ.ಕುಮಾರಸ್ವಾಮಿ ಅವರು ನನಗೆ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಜಿಲ್ಲೆಯ ಪ್ರತಿ ತಾಲ್ಲೂಕಿಗೆ ಪ್ರವಾಸ ಮಾಡಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸುತ್ತೇನೆ- ಬಾಲರಾಜ ಗುತ್ತೇದಾರ ಜೆಡಿಎಸ್ ಜಿಲ್ಲಾ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.