ADVERTISEMENT

₹1,685 ಕೋಟಿ ವೆಚ್ಚದಲ್ಲಿ ಕಲಬುರಗಿ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ: ಸಿಎಂ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2024, 5:09 IST
Last Updated 17 ಸೆಪ್ಟೆಂಬರ್ 2024, 5:09 IST
   

ಕಲಬುರಗಿ: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿರುವುದಾಗಿ ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿ ನಗರವನ್ನು ರಾಜ್ಯ ಸರ್ಕಾರದ ವತಿಯಿಂದಲೇ 1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಿಸಿದರು.

ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ತಮ್ಮ ಸರ್ಕಾರ ಈ ಭಾಗದ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಿದ ಹಲವು ಯೋಜನೆಗಳನ್ನು ವಿವರಿಸಿದರು.

ಸುಮಾರು 20 ನಿಮಿಷಗಳ ಕಾಲ ಹದಿನಾಲ್ಕು ಪುಟಗಳ ಲಿಖಿತ ಭಾಷಣ ಓದಿದ ಮುಖ್ಯಮಂತ್ರಿಗಳು, ಹೈದರಾಬಾದ್ ‌ನಿಜಾಮರ ಆಡಳಿತದಿಂದ ಈ ಭಾಗದ ಜನತೆಗೆ ಒಂದು ವರ್ಷ ತಡವಾಗಿ ವಿಮೋಚನೆ ದೊರಕಿತು. ಆಗಿನಿಂದಲೂ ಆರ್ಥಿಕವಾಗಿ ಹಿಂದುಳಿದ ಈ ಭಾಗಕ್ಕೆ ಮಲ್ಲಿಕಾರ್ಜುನ ‌ಖರ್ಗೆ, ಎನ್. ಧರಂಸಿಂಗ್ ಅವರ ಪ್ರಯತ್ನದ ಫಲವಾಗಿ 371 (ಜೆ) ಸಂವಿಧಾನ ತಿದ್ದುಪಡಿ ಮೂಲಕ ಕೇಂದ್ರ ಸರ್ಕಾರ ಮೀಸಲಾತಿ ಕಲ್ಪಿಸಿದೆ. ಅದರ ಭಾಗವಾಗಿ ರಚನೆಯಾದ ಕಲ್ಯಾಣ ಕರ್ನಾಟಕ ‌ಪ್ರದೇಶ ಅಭಿವೃದ್ಧಿ ಮಂಡಳಿಗೆ ನಮ್ಮ ಸರ್ಕಾರ ಪ್ರತಿವರ್ಷ ₹ 5000 ಕೋಟಿ ಅನುದಾನ ನೀಡುತ್ತಿದೆ ಎಂದರು.

ADVERTISEMENT

ಮಂಡಳಿಯ ₹ 262 ಕೋಟಿ ನೆರವಿನೊಂದಿಗೆ ಕಲಬುರಗಿಯಲ್ಲಿ ಸುಸಜ್ಜಿತ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ಕಟ್ಟಡದ ನಿರ್ಮಾಣ ಪೂರ್ಣಗೊಳ್ಳುವ ಹಂತದಲ್ಲಿದೆ. ಮಲ್ಲಿಕಾರ್ಜುನ ‌ಖರ್ಗೆ ಅವರ ಆಶಯದಂತೆ ಕಲಬುರಗಿಯನ್ನು ಪ್ರಾದೇಶಿಕ ಆರೋಗ್ಯ ಕೇಂದ್ತವಾಗಿಸಲು ಹೆಜ್ಜೆ ಇಟ್ಟಿದ್ದೇವೆ ಎಂದರು.

ಕೆಕೆಆರ್ ಡಿಬಿಗೆ ಕಳೆದ ಹತ್ತು ವರ್ಷಗಳಲ್ಲಿ ₹ 19,778 ಕೋಟಿ ಹಂಚಿಕೆ ಮಾಡಿ, 13,229 ಕೋಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಇದುವರೆಗೆ ₹ 11,174 ಕೋಟಿ ಖರ್ಚು ಮಾಡಲಾಗಿದೆ. ಶೇ 85ರಷ್ಟು ಆರ್ಥಿಕ ಪ್ರಗತಿ ಸಾಧಿಸಲಾಗಿದೆ ಎಂದರು.

ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಿದ್ದೇವೆ. ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಸ್ಥಾಪಿಸಲು ನಮ್ಮ ಸರ್ಕಾರ ಅಗತ್ಯವಿರುವ ಎಲ್ಲ‌ ನೆರವನ್ನು ಒದಗಿಸಲು ಸಿದ್ಧವಿದೆ. ಕೇಂದ್ರ ಸರ್ಕಾರ ಕೂಡಲೇ ಏಮ್ಸ್ ಸಂಸ್ಥೆ ಆರಂಭಿಸಲು ಅನುಮೋದನೆ ನೀಡಬೇಕು ಎಂದು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

ಕಲಬುರಗಿ ಹೊರವಲಯದ ನದಿಸಿನ್ನೂರು ಬಳಿ ಕೇಂದ್ರ ರಾಜ್ಯದ ಸಹಭಾಗಿತ್ವದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ನಿರ್ಮಿಸಲಾಗುತ್ತಿದ್ದು, ಇದಕ್ಕಾಗಿ ಪ್ರಸಕ್ತ ಬಜೆಟ್ ನಲ್ಲಿ ₹ 50 ಕೋಟಿ ಒದಗಿಸಲಾಗಿದೆ. ರಾಯಚೂರಿನಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ನೂತನ ಟೆಕ್ಸ್ ಟೈಲ್ ಪಾರ್ಕ್ ನಿರ್ಮಿಸಲಾಗುವುದು ಎಂದರು.

ಇಂದು ಸಂಜೆ ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಭಾಗದ ಶಿಕ್ಷಣ, ಆರೋಗ್ಯ, ಸಾರಿಗೆ, ನೀರಾವರಿ, ಪ್ರವಾಸೋದ್ಯಮ ಅಭಿವೃದ್ಧಿ ಮುಂತಾದ ಮೂಲಸೌಕರ್ಯಗಳನ್ನು ಒದಗಿಸಲು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಭರವಸೆ ನೀಡಿದರು.

ಬಿಜೆಪಿ ಸರ್ಕಾರ ಕುಟುಕಿದ ಸಿದ್ದರಾಮಯ್ಯ

ತಮ್ಮ ಭಾಷಣದಲ್ಲಿ ಹಿಂದಿನ ಬಿಜೆಪಿ ಸರ್ಕಾರವನ್ನು ಕುಟುಕಿದ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು, ಹಿಂದೆ ಆಡಳಿತ ನಡೆಸಿದ್ದ ಸರ್ಕಾರ ಅಶಿಸ್ತು, ಭ್ರಷ್ಟಾಚಾರ ಮುಂತಾದವುಗಳ‌ ಮೂಲಕ ರಾಜ್ಯ ಸರ್ಕಾರವನ್ನು ಅಧಃಪತನದತ್ತ ಕೊಂಡೊಯ್ದಿತ್ತು. ಬಜೆಟ್ ನಲ್ಲಿ ಅನುದಾನ ಘೋಷಿಸದೇ ಸಾವಿರಾರು ಕೋಟಿ ಮೊತ್ತದ ಕಾಮಗಾರಿಗಳನ್ನು ತೆಗೆದುಕೊಂಡಿತ್ತು. ಇದು ಸಾಲದೆಂಬಂತೆ ಕೇಂದ್ರ ಸರ್ಕಾರ ನಮಗೆ ನ್ಯಾಯಯುತವಾಗಿ ಕೊಡಬೇಕಾದುದನ್ನು‌ ಕೊಡದೇ ವಂಚನೆ ಮಾಡಿದೆ ಎಂದು ಹರಿಹಾಯ್ದರು.

ಇಷ್ಟೆಲ್ಲದರ ಮಧ್ಯೆಯೂ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಪರಿಣಾಮವಾಗಿ ಅನುಷ್ಠಾನಕ್ಕೆ ತಂದಿದೆ. ಕಲ್ಯಾಣ ಕರ್ನಾಟಕಕ್ಕೆ ₹ 5 ಸಾವಿರ‌ ಕೋಟಿ ಒದಗಿಸುತ್ತಿದೆ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.