ಕಲಬುರಗಿ: ‘ಮುಂಗಾರಿನ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ) ಹೆಚ್ಚಿಸಿದ್ದೇವೆ ಎನ್ನುವ ಕೇಂದ್ರದ ಬಿಜೆಪಿ ಸರ್ಕಾರ ಮತ್ತೊಮ್ಮೆ ಸುಳ್ಳು ಹೇಳುವ ಮೂಲಕ ಮೋಸ ಮಾಡುತ್ತಿದೆ’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಆರೋಪಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯು ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಇರಲಿದೆ ಎಂದು ಹೇಳುತ್ತಿದೆ. ಆದರೆ ಅದು ಸುಳ್ಳು, ಕೇಂದ್ರ ಘೋಷಿಸಿರುವ ಎಂಎಸ್ಪಿಯಲ್ಲಿ ಬಿತ್ತನೆ ವೆಚ್ಚ ಮಾತ್ರ ಸೇರಿದೆ. ಬೇಸಿಗೆ ಗಳೆಯಿಂದ ಹಿಡಿದು ಲಾಗೋಡಿ ವೆಚ್ಚ ಯಾವುದೂ ಅದರಲ್ಲಿ ಸೇರಿಲ್ಲ. ಡಾ. ಎಂ.ಎಸ್.ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ಎಂಎಸ್ಪಿ ಕಾನೂನು ಜಾರಿ ಮಾಡಬೇಕು’ ಎಂದು ಅವರು ಆಗ್ರಹಿಸಿದರು.
‘ಬಿತ್ತನೆ ಬೀಜ, ಗೊಬ್ಬರದ ಬೆಲೆ ಏರಿಕೆಯಾಗಿದೆ. ಅದನ್ನು ಇಳಿಸಬೇಕು. ಕೇಂದ್ರ ಸರ್ಕಾರದ ನೀತಿಗಳಿಂದ ವ್ಯವಸಾಯ ಮತ್ತಷ್ಟು ದಿವಾಳಿಯಾಗುತ್ತಿದೆ. ರೈತ ಉಳಿಯಬೇಕಾದರೆ ಎಂ.ಎಸ್.ಸ್ವಾಮಿನಾಥನ್ ಆಯೋಗದ ವರದಿ ಜಾರಿಯಾಗಬೇಕು’ ಎಂದು ಅವರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜನವಾದಿ ಮಹಿಳಾ ಸಂಘಟನೆಯ ಕಾರ್ಯದರ್ಶಿ ಪದ್ಮಿನಿ ಕಿರಣಗಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.