ಕಲಬುರಗಿ: ‘ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ಮಟ್ಟಿಗೆ ಕಾಂಗ್ರೆಸ್ ಪಕ್ಷ ಉತ್ತಮ ಸಾಧನೆ ಮಾಡುವ ದಿಸೆಯಲ್ಲಿ ಆಶಾವಾದಿಯಾಗಿದೆ. ಮತಗಟ್ಟೆ ಸಮೀಕ್ಷೆಗಳು ಅದೇನೇ ಹೇಳಲಿ, ರಾಜ್ಯದಲ್ಲಿ ಕಾಂಗ್ರೆಸ್ಗೆ ಡಬಲ್ ಡಿಜಿಟ್ ಗ್ಯಾರಂಟಿ’ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
‘ಕಾಂಗ್ರೆಸ್ ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ಪಕ್ಷಕ್ಕೆ ರಾಜ್ಯದಲ್ಲಿ 28 ಸ್ಥಾನಗಳ ಪೈಕಿ 14ರಿಂದ 16 ಸ್ಥಾನ ನಿಶ್ಚಿತ ಎಂದು ಗೊತ್ತಾಗಿದೆ. ರಾಜ್ಯ ಸರ್ಕಾರ ನುಡಿದಂತೆ ನಡೆದಿದ್ದು, ರಾಜ್ಯದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳು ತುಂಬ ಪರಿಣಾಮಕಾರಿಯಾಗಿ ಕೆಲಸ ಮಾಡಿವೆ. ನಮ್ಮ ಗೆಲುವಿನ ಅಂಕಿಗಳ ಲೆಕ್ಕ ರಾಜ್ಯದಲ್ಲಿ 20ಕ್ಕೆ ತಲುಪಿದರೂ ಅಚ್ಚರಿ ಪಡಬೇಕಾಗಿಲ್ಲ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ತುಂಬಾನೇ ಇತ್ತು. ಹೀಗಾಗಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟಕ್ಕೆ 295 ಸ್ಥಾನ ಸಿಗೋದರಲ್ಲಿ ಅನುಮಾನವಿಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
‘ಈ ಬಾರಿ ಎಐಸಿಸಿ ಅಧ್ಯಕ್ಷರ ತವರು ಜಿಲ್ಲೆ ಕಲಬುರಗಿಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸೋದು ಶತಸಿದ್ಧ. ಈ ಬಾರಿ ಇಲ್ಲಿ ಬಿಜೆಪಿ ಧೂಳಿಪಟವಾಗಲಿದೆ. ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ದೊಡ್ಡ ಬಹುಮತದೊಂದಿಗೆ ಗೆದ್ದು ಲೋಕಸಭೆ ಪ್ರವೇಶ ಮಾಡೋದು ಗ್ಯಾರಂಟಿ’ ಎಂದು ಡಾ.ಅಜಯ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.