ಕಲಬುರಗಿ: 7 ಗೋ ಶಾಲೆಗಳಿಗೆ ನೆರವು ನೀಡಲು ಬುಧವಾರ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘ ಸಭೆಯಲ್ಲಿ ನಿರ್ಧರಿಸಲಾಯಿತು.
ಪಶು ಸಂಗೋಪನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಎಸ್.ಡಿ.ಅವಂಟಿ ಅವರು ಈ ವರ್ಷ ಸರ್ಕಾರದಿಂದ ಗೋ ಶಾಲೆ ನಿರ್ವಹಣೆಗೆ ನೆರವಿಗಾಗಿ ಸಲ್ಲಿಕೆಯಾದ ಪ್ರಸ್ತಾವಗಳನ್ನು ಸಭೆ ಮುಂದಿಟ್ಟರು. ಎಲ್ಲ ನಿಯಮಗಳ ಪಾಲನೆಯಾಗಿದೆ ಎನ್ನುವುದು ಮನವರಿಕೆಯಾದ ಬಳಿಕ ಗೋ ಶಾಲೆಗಳಿಗೆ ನೆರವು ನೀಡಲು ಸಮ್ಮತಿ ಸೂಚಿಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ‘ಗೋ ಶಾಲೆ ಸಹಕಾರ ಇಲಾಖೆಯಡಿ ನೋಂದಣಿಯಾಗಬೇಕು. ಪಶುಸಂಗೋಪನೆ ಸಹಾಯಕ ನಿರ್ದೇಶಕರು, ಸಹಕಾರ ಸಂಘಗಳ ನಿಬಂಧಕರು ಭೇಟಿ ನೀಡಿ ಪರಿಶೀಲಿಸಬೇಕು’ ಎಂದ ಅವರು, ‘ಜೂನ್ 17 ರಂದು ನಡೆಯುವ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು. ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಡಿಸಿಪಿ ಕನಿಕಾ ಸಿಕ್ರಿವಾಲ್, ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.