ಕಲಬುರಗಿ: ಗುಲಬರ್ಗಾ ವಿವಿಯ ಬಿಸಿಎಂ ಹಾಸ್ಟೆಲ್ನಲ್ಲಿ ನೀರಿಲ್ಲ ಮತ್ತು ಊಟ ಸರಿಯಾಗಿ ಕೊಡುತ್ತಿಲ್ಲ ಎಂದು ಆರೋಪಿಸಿ ಸ್ನಾತಕೋತ್ತರ ವಿದ್ಯಾರ್ಥಿನಿಯರು ವಸತಿನಿಲಯದ ಎದುರು ಮಂಗಳವಾರ ಅಹೋರಾತ್ರಿ ಧರಣಿ ನಡೆಸಿದರು.
‘ಎರಡು ದಿನಗಳಿಂದ ಹಾಸ್ಟೆಲ್ನಲ್ಲಿ ನೀರಿಲ್ಲದ ಕಾರಣ ಸ್ನಾನ ಮಾಡದೇ ತರಗತಿಗಳಿಗೆ ಹಾಜರಾಗಿದ್ದೇವೆ. ಬೋರ್ವೆಲ್ ಮೋಟರ್ ದುರಸ್ತಿ ಮಾಡಿಸುವುದಾಗಿ ಭರವಸೆ ನೀಡಿ ನಿರ್ಲಕ್ಷ್ಯ ವಹಿಸಿದ್ದಾರೆ. ಮೂಲಸೌಕರ್ಯ ಕೊರತೆಯಿಂದ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ’ ಎಂದು ವಾರ್ಡನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
‘ಶುಚಿತ್ವ ಕಿಟ್ ಕೊಟ್ಟಿಲ್ಲ. ಊಟ ಕೂಡ ಸರಿಯಾಗಿ ಕೊಡಲ್ಲ. ಎರಡನೇ ಮತ್ತು ನಾಲ್ಕನೇ ಶನಿವಾರ, ಎಲ್ಲ ಭಾನುವಾರ ಊರಿಗೆ ಹೋಗಿ ಎಂದು ವಾರ್ಡನ್ ಹೇಳುತ್ತಾರೆ’ ಎಂದು ಗಂಭೀರ ಆರೋಪ ಮಾಡಿದರು.
ವಿದ್ಯಾರ್ಥಿನಿಯರು ಧರಣಿ ನಡೆಸಿದ ಸ್ಥಳಕ್ಕೆ ವಿಶ್ವವಿದ್ಯಾಲಯದ ಸಿಬ್ಬಂದಿ ಅಥವಾ ಸಂಬಂಧಪಟ್ಟ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಾಗಲಿ ಭೇಟಿ ನೀಡಿಲ್ಲ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.