ಮಡಿಕೇರಿ: ಜಾತಿ ನಿಂದನೆ ಮಾಡಿ, ಕೊಲೆ ಮಾಡಲು ಯತ್ನಿಸಿದ ಅಪರಾಧಿ ನಂದೀಶ ಎಂಬಾತನಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹ 15 ಸಾವಿರ ದಂಡ ವಿಧಿಸಿದೆ.
ಈತ ಮಾದಪಟ್ಟಣ ಗ್ರಾಮದ ನಿವಾಸಿ ಅಣ್ಣಾಜಿ ಎಂಬುವವರ ಮೇಲೆ ಹಳೆಯ ದ್ವೇಷದ ಕಾರಣಕ್ಕೆ 2022ರ ಅಕ್ಟೋಬರ್ 11ರಂದು ಜಾತಿ ನಿಂದನೆ ಮಾಡಿ, ಕತ್ತಿಯಿಂದ ತಲೆ ಹಾಗೂ ಕಿವಿಯ ಭಾಗಕ್ಕೆ ಹಲ್ಲೆ ನಡೆಸಿದ್ದ. ಇದರಿಂದ ಅಣ್ಣಾಜಿ ಅವರ ಕಿವಿ ತುಂಡಾಗಿ, ದವಡೆಯ ಮೂಳೆ ಮುರಿದು, ತೀವ್ರ ಸ್ವರೂಪದ ಗಾಯಗಳಾಗಿದ್ದವು.
ಕುಶಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ತನಿಖಾಧಿಕಾರಿ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ನೇತೃತ್ವದ ತಂಡವು ನಂದೀಶ್ನನ್ನು ಬಂಧಿಸಿ, ಐಪಿಸಿ 307 ಮತ್ತು ಎಸ್.ಸಿ, ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಿ.ಪ್ರಶಾಂತಿ ಅವರು ಅಪರಾಧಿಗೆ ಶಿಕ್ಷೆ ವಿಧಿಸಿದರು. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಎನ್.ಪಿ.ದೇವೇಂದ್ರ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.