ಸುಂಟಿಕೊಪ್ಪ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಇಲ್ಲಿನ ಅಯ್ಯಪ್ಪ ದೇವಾಲಯದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಲಾಗಿ ಜಾಹೀರಾತು ಫಲಕ ಹಾಕಿರುವುದು ಬೃಹತ್ ವಾಹನಗಳಿಗೆ ಅಡ್ಡಿ ಉಂಟಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತಮ್ಮ ನಿರ್ಲಕ್ಷ್ಯದಿಂದ ವಾಹನಗಳಿಗೆ ಅಡ್ಡಿಯಾಗುವ ರೀತಿಯಲ್ಲಿ ಫಲಕ ಅಳವಡಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಆಡಳಿತ ಮಂಡಳಿಯ ಗಮನಕ್ಕೆ ಬಂದಿದ್ದರೂ ಕೂಡ ಇದುವರೆಗೂ ತೆರವುಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಅವರು ದೂರಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಗ್ರಾಮ ಪಂಚಾಯಿತಿ ಪಿಡಿಒ ಲೋಕೇಶ್, ‘ಗ್ರಾಮ ಪಂಚಾಯಿತಿಯಿಂದ ಯಾರಿಗೂ ತೊಂದರೆಯಾಗದಂತೆ ಫಲಕ ಅಳವಡಿಸಲಾಗುವುದು ಎಂದು ಅನುಮತಿ ಪಡೆದಿದ್ದಾರೆ. ಬೇಲಿಯ ಬದಿಯಲ್ಲಿ ನಾಮಪಲಕ ಅಳವಡಿಸಬೇಕಾಗಿತ್ತು. ಆದರೆ, ನಮ್ಮಗಳ ಗಮನಕ್ಕೆ ಬಾರದೆ ಈ ರೀತಿ ಅಡ್ಡವಾಗಿ ಅಳವಡಿಸಿರುವ ಬಗ್ಗೆ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲೂ ಕೂಡ ಚರ್ಚೆ ನಡೆದಿದೆ. ಈ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಗಮನಕ್ಕೆ ತಂದು ಕೂಡಲೇ ತೆರವುಗೊಳಿಸುವುದಾಗಿ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.