ADVERTISEMENT

ಕಾಂಗ್ರೆಸ್ ವಿರುದ್ಧ ಗುಡುಗಿದ ಬಿಜೆಪಿ

ಹಿರಿಯ ಮುಖಂಡರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್ ಜಂಟಿ ಸುದ್ದಿಗೋಷ್ಠಿ

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 4:46 IST
Last Updated 25 ಜೂನ್ 2024, 4:46 IST
ಕೆ.ಜಿ.ಬೋಪಯ್ಯ,
ಕೆ.ಜಿ.ಬೋಪಯ್ಯ,   

ಮಡಿಕೇರಿ: ‘ಸರ್ವಾಧಿಕಾರಿ ಧೋರಣೆಯಿಂದ ವರ್ತಿಸಿ ಪ್ರಕರಣ ದಾಖಲಿಸುವ ಮೂಲಕ ಬಿಜೆಪಿಯನ್ನು ಬಗ್ಗು ಬಡಿಯಲು ಮುಂದಾದರೆ ನಾವು ಮಣಿಯುವುದಿಲ್ಲ’ ಎಂದು ಬಿಜೆಪಿಯ ಹಿರಿಯ ಮುಖಂಡರಾದ ಕೆ.ಜಿ. ಬೋಪಯ್ಯ ಹಾಗೂ ಎಂ.ಪಿ. ಅಪ್ಪಚ್ಚುರಂಜನ್ ಸೋಮವಾರ ಇಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಗುಡುಗಿದರು.

ಕೆ.ಜಿ. ಬೋಪಯ್ಯ ಮಾತನಾಡಿ, ‘ಕೊಡಗಿನಲ್ಲಿ ಜಾತಿಗಳ ಮಧ್ಯೆ ವೈಷಮ್ಯ ಹುಟ್ಟಿಸುವುದು, ಜಾತಿಯ ಬಣ್ಣ ಹಚ್ಚಿ ಸಮಾಜವನ್ನು ಒಡೆಯುವ ಕೆಲಸ ಮಾಡಬಾರದು’ ಎಂದು ಹೇಳಿದರು.

‘ಇಂಧನ ಬೆಲೆಯ ಅವೈಜ್ಞಾನಿಕ ಏರಿಕೆಯ ವಿರುದ್ಧವಾಗಿ ಪ್ರತಿಭಟನೆ ಮಾಡಿದ್ದೇವೆ. ಆದರೆ, ವಿರಾಜಪೇಟೆಯಲ್ಲಿ ಪ್ರತಿಭಟನೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ ಹೆದರಿಸುವ ಕೆಲಸ ನಡೆದಿದೆ’ ಎಂದು ಕಿಡಿಕಾರಿದರು.

ADVERTISEMENT

ಸರ್ವಾಧಿಕಾರಿ ಧೋರಣೆ ಕೊಡಗಿನಲ್ಲಿ ನಡೆಯುವುದಿಲ್ಲ. ಪೊನ್ನಣ್ಣ ಅವರು ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಒಳ್ಳೆಯ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.

ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ‘ಈ ಹಿಂದೆಯೂ ಬಿಜೆಪಿಯವರ ಪ್ರತಿಕೃತಿಗಳನ್ನು ಕಾಂಗ್ರೆಸ್‌ನವರು ಸುಟ್ಟಿದ್ದರು. ಆಗ ನಾವು ಯಾರ ವಿರುದ್ಧವೂ ದೂರು ನೀಡಿರಲಿಲ್ಲ. ಆದರೆ, ವಿರಾಜಪೇಟೆಯಲ್ಲಿ ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಕಾಂಗ್ರೆಸ್ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ’ ಎಂದು ದೂರಿದರು.

ಇಂತಹ ಕ್ಷುಲ್ಲಕ ರಾಜಕಾರಣ ಬಿಟ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವತ್ತ ಗಮನ ಹರಿಸಬೇಕು. ನಾವು ಜಿಲ್ಲೆಗೆ ತಂದ ಅನುದಾನದಲ್ಲಿ ಅರ್ಧದಷ್ಟನ್ನಾದರೂ ಅವರು ತರಲಿ ಎಂದು ಸವಾಲೆಸೆದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ ಮಾತನಾಡಿ, ‘ಕೊಡವ ಶಾಸಕ ಎಂಬ ಕಾರಣಕ್ಕೆ ಬಿಜೆಪಿ ಪ್ರತಿಭಟನೆ ಮಾಡಿಲ್ಲ. ಆದರೆ, ಲೋಕಸಭೆ ಮತ್ತು ವಿಧಾನಪರಿಷತ್ತಿನ ಚುನಾವಣೆಗಳಿಂದ ಸೋತಿರುವ ಕಾಂಗ್ರೆಸ್ ಹತಾಶೆಯಿಂದ ಪ್ರಕರಣ ದಾಖಲಿಸಿದೆ. ಹಾಗೆ ನೋಡಿದರೆ, ಪ್ರತಿಕೃತಿ ದಹನದಂತಹ ಸಂಸ್ಕೃತಿಯನ್ನು ಮೊದಲು ಪರಿಚಯಿಸಿದ್ದೇ ಕಾಂಗ್ರೆಸ್’ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ಮಾಚಿಮಾಡ ರವೀಂದ್ರ ಮಾತನಾಡಿ, ‘ಬಿಜೆಪಿ ಪ್ರತಿಭಟನೆಯನ್ನೇ ಗುರಿಯಾಗಿಸಿಕೊಂಡು ಅವಹೇಳನಕಾರಿಯಾದ ಬರಹಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗುವುದು’ ಎಂದು ತಿಳಿಸಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ. ಲೋಕೇಶ್ ಭಾಗವಹಿಸಿದ್ದರು.

ಎಂ.ಪಿ.ಅಪ್ಪಚ್ಚುರಂಜನ್

Highlights - ಪ್ರಕರಣ ದಾಖಲಿಸಿರುವುದರ ವಿರುದ್ಧ ಕಿಡಿಕಾರಿದ ಮುಖಂಡರು ಅಭಿವೃದ್ಧಿ ಕಾರ್ಯ ಮಾಡಲು ಸಲಹೆ ಸೋಲಿನಿಂದ ಹತಾಶಗೊಂಡು ಪ್ರಕರಣ ದಾಖಲು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.