ಕುಶಾಲನಗರ: ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ಪತ್ರಕರ್ತರ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಪಂದ್ಯಾವಳಿ ಉದ್ಘಾಟಿಸಿದರು.
ಜಿಲ್ಲೆಯ 6 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಫೈನಲ್ ಪಂದ್ಯದಲ್ಲಿ ಇಸ್ಮಾಯಿಲ್ ಕಂಡಕೆರೆ ಮಾಲೀಕತ್ವದ ಮುಸ್ತಾಪ ನಾಯಕತ್ವದ ಮಿಡಿಯಾ ಸೂಪರ್ ಕಿಂಗ್ಸ್ ತಂಡ ಪ್ರಥಮ ಸ್ಥಾನ ಗಳಿಸಿತು. ಜಯಪ್ರಕಾಶ್ ಮಾಲೀಕತ್ವ, ಶಿವರಾಜ್ ನಾಯಕತ್ವದ ಸೆನ್ಸಾ ತಂಡ ದ್ವಿತೀಯ ಸ್ಥಾನ, ಮಂಜು ಸುವರ್ಣ ಮಾಲೀಕತ್ವದ, ಆದರ್ಶ್ ನಾಯಕತ್ವದ ಟೀಂ ನಾಟೌಟ್ ತೃತೀಯ, ವಿಶ್ವ ಕುಂಬೂರು ಮಾಲಿಕತ್ವದ, ಕೆ.ಎಂ.ವಿನೋದ್ ನಾಯಕತ್ವದ ವಿ.ತ್ರಿ.ತಂಡ ನಾಲ್ಕನೇ ಸ್ಥಾನ ಗಳಿಸಿತು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಡಾ. ಮಂತರ್ ಗೌಡ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.
ನಂತರ ಮಾತನಾಡಿದ ಅವರು, ಯಾವುದೇ ಸಂಘಟನೆಗಳು ಒಗ್ಗಟ್ಟು ಪ್ರದರ್ಶಿಸಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ. ಒತ್ತಡದ ಕೆಲಸ ನಡುವೆ ಬಿಡುವು ಮಾಡಿಕೊಂಡು ಸಂಭ್ರಮಿಸಲು ಕ್ರೀಡೆಗಳು ಸಹಕಾರಿ. ಕ್ರೀಡಾಕೂಟ ಎಲ್ಲರಲ್ಲಿ ಸಾಮರಸ್ಯ ಬೆಳೆಸುವಲ್ಲಿ ಸಹಕಾರಿಯಾಗಲಿದೆ. ಸಾಮಾಜಿಕ ಹೊಣೆಗಾರಿಕೆ ಪ್ರದರ್ಶಿಸುವ ಮಾಧ್ಯಮಗಳು ಇನ್ನಷ್ಟು ಪರಿಣಾಮಕಾರಿಯಾಗಿ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುವಂತಾಗಲಿ ಎಂದರು.
ರಾಜ್ಯ ಸಮಿತಿ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಪತ್ರಕರ್ತರ ಸಂಘಟನೆ ಉದ್ದೇಶದಿಂದ ಆರಂಭಿಸಿದ ಕ್ರಿಕೆಟ್ ಪಂದ್ಯಾವಳಿ ಜಿಲ್ಲೆಯಾದ್ಯಂತ ಯಶಸ್ವಿಯಾಗಿ ಮುನ್ನಡೆದುಕೊಂಡು ಬರುತ್ತಿರುವುದು ಶ್ಲಾಘನೀಯ ವಿಚಾರ ಎಂದರು. ವಿಷಯಾಧಾರಿತ ವರದಿಗಳು ಹೆಚ್ಚು ಪರಿಣಾಮಕಾರಿಯಾಗಿ ಮೂಡಿಬರಲಿ ಎಂದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಮಾತನಾಡಿ, ಬೆಳ್ಳಿಹಬ್ಬದ ಅಂಗವಾಗಿ ಕುಶಾಲನಗರ ತಾಲೂಕು ಸಂಘದಿಂದ ಹಮ್ಮಿಕೊಂಡಿರುವ ವಿವಿಧ ಚಟುವಟಿಕೆಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಜಿ.ಪಂ ಮಾಜಿ ಸದಸ್ಯ ವಿ.ಪಿ.ಶಶಿಧರ್, ಕುಡಾ ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡುರಾವ್ ಮಾತನಾಡಿದರು. ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರ ಮೋಹನ್ ಪಂದ್ಯಾವಳಿಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪುರಸಭೆ ಸದಸ್ಯ ಪ್ರಮೋದ್ ಮುತ್ತಪ್ಪ, ಪ.ಪಂ ಮಾಜಿ ಸದಸ್ಯ ಜೋಸೆಫ್ ವಿಕ್ಟರ್ ಸೋನ್ಸ್, ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಮಂಜುನಾಥ್, ಜಿಲ್ಲಾ ಕ್ರೀಡಾ ಸಮಿತಿ ಸಂಚಾಲಕ ಮಂಜು ಸುವರ್ಣ, ತಾಲೂಕು ಸಂಚಾಲಕ ಶಿವರಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.