ಮಡಿಕೇರಿ: ಇಲ್ಲಿನ ಗಾಂಧಿ ಭವನದಲ್ಲಿ ಬುಧವಾರ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಈ ಪದ್ಧತಿ ನಿರ್ಮೂಲನೆಗೆ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರೆ, ವಕೀಲರಾದ ಯಾಲದಾಳು ಮನೋಜ್ ಬೋಪಯ್ಯ ಅವರು ಬಾಲಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕಲು ಮತ್ತಷ್ಟು ಪರಿಣಾಮಕಾರಿ ಕಾರ್ಯಗಳು ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘದ ವತಿಯಿಂದ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ಈ ಬಗೆಯ ಅಭಿಪ್ರಾಯಗಳು ವ್ಯಕ್ತವಾದವು.
ಮೊದಲಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ವಕೀಲರಾದ ಯಾಲದಾಳು ಮನೋಜ್ ಬೋಪಯ್ಯ ಅವರು, ‘ರಾಷ್ಟ್ರವು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯತ್ತ ಹೆಜ್ಜೆ ಹಾಕುತ್ತಿದ್ದು, ಆ ದಿಸೆಯಲ್ಲಿ ಮತ್ತಷ್ಟು ಪರಿಣಾಮಕಾರಿ ಕಾರ್ಯಗಳು ಆಗಬೇಕಿದೆ’ ಎಂದು ಅಭಿಪ್ರಾಯಪಟ್ಟರು.
14 ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು. ಶಾಲೆಗೆ ಹೋಗುವುದನ್ನು ತಪ್ಪಿಸಬಾರದು ಎಂದು ಹೇಳಿದರು.
ಸ್ವಾತಂತ್ರ್ಯ ನಂತರ ರಾಜ್ಯ ನಿರ್ದೇಶಕ ತತ್ವಗಳಲ್ಲೂ ಸಹ ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಹೇಳಲಾಗಿದೆ. 1986 ರಲ್ಲೂ ಸಹ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಂಬಂಧಿಸಿದಂತೆ ವಿವರಿಸಲಾಗಿದೆ. ಹಾಗೆಯೇ 2016 ರಲ್ಲೂ ಸಹ ಬಾಲಕಾರ್ಮಿಕ ಪದ್ಧತಿ ವಿರೋಧ ಕಾಯ್ದೆ ಜಾರಿಗೆ ಬಂದಿದೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಮಾತನಾಡಿ, ‘ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಬೇಕು. ಹಾಗಾದಾಗ ಮಾತ್ರ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯ’ ಎಂದು ಹೇಳಿದರು.
‘14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ವಿದ್ಯಾರ್ಥಿ ನಿಲಯ ವ್ಯವಸ್ಥೆ ಇದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ವಸತಿ ಶಾಲೆಗಳು ಉತ್ತಮ ಹೆಸರು ಮಾಡುತ್ತಿದ್ದು, ಇಂತಹ ಅವಕಾಶಗಳನ್ನು ಮಕ್ಕಳು ಬಳಸಿಕೊಳ್ಳಬೇಕು ಎಂದು ವರ್ಣಿತ್ ನೇಗಿ ಅವರು ಸಲಹೆ ಮಾಡಿದರು.’
ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಅಧಿಕಾರಿ ಎಸ್.ಎಲ್.ಹರ್ಷವರ್ಧನ್ ಅವರು ಬಾಲ ಕಾರ್ಮಿಕ ವಿರೋಧಿ ದಿನದ ಪ್ರಯುಕ್ತ ಪ್ರಮಾಣ ವಚನ ಬೋಧಿಸಿದರು.
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ತೊಡಗಿಸಿಕೊಂಡು ತಯಾರಿಸಿದ ಯಾವುದೇ ವಸ್ತುವನ್ನು ಉಪಯೋಗಿಸುವುದಿಲ್ಲ. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಸೇವೆ ಪಡೆಯುವುದಿಲ್ಲ ಎಂಬ ಕಾಳಜಿ ಇರಬೇಕು ಎಂದರು.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹೊಸಮನಿ ಪುಂಡಲಿಕ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ.ಜಯಲಕ್ಷ್ಮಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಉಪ ವಿಭಾಗಾಧಿಕಾರಿ ವಿನಾಯಕ್ ಕೆ.ನರ್ವಾಡೆ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಸಮಗ್ರ ಗಿರಿಜನ ಯೋಜನಾಧಿಕಾರಿ ಎಸ್.ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು, ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಆರ್.ಶೀರಾಝ್ ಅಹ್ಮದ್ ಭಾಗವಹಿಸಿದ್ದರು.
ಕಳೆದ ಸಾಲಿನಲ್ಲಿ 17 ಕಿಶೋರ ಕಾರ್ಮಿಕರ ರಕ್ಷಣೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ 2017–18ನೇ ಸಾಲಿನಿಂದ ಇಲ್ಲಿಯವರೆಗ ಒಟ್ಟು 52 ಮಂದಿ ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ. ಕಳೆದ ಸಾಲಿನಲ್ಲಿ 17 ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳು ಈ ಸಾಲಿನಲ್ಲೂ ಅನಿರೀಕ್ಷಿತ ದಾಳಿಗಳನ್ನು ನಿರ್ಧರಿಸಿದ್ದಾರೆ. ಹಾಗಾಗಿ ಎಲ್ಲಿಯಾದರೂ ಬಾಲ ಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಮಾಡಿದ್ದಾರೆ. ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಅಧಿಕಾರಿ ಎಸ್.ಎಲ್.ಹರ್ಷವರ್ಧನ್ ‘ಕೊಡಗು ಜಿಲ್ಲೆಯಲ್ಲಿ ಎಲ್ಲಿಯಾದರೂ ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರು ದುಡಿಯುತ್ತಿರುವುದು ಕಂಡು ಬಂದರೆ ಕೂಡಲೇ 1098 ಅಥವಾ 112 ರ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು. ಈ ವಿಷಯ ಕುರಿತು ಹಾಗೂ ಕಾರ್ಮಿಕರು ತಮ್ಮ ಸಮಸ್ಯೆಗಳ ಕುರಿತು 155214 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.