ಕುಶಾಲನಗರ: ಮಾನವ ಹಕ್ಕುಗಳು ಬಹಳ ಪ್ರಮುಖವಾದವುಗಳು ಮತ್ತು ಪ್ರತಿಯೊಬ್ಬ ವ್ಯಕ್ತಿಗೂ ಸೇರಿದವು ಎಂದು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಆರ್.ಕೆ.ನಾಗೇಂದ್ರ ಬಾಬು ಹೇಳಿದರು.
ಪಟ್ಟಣದ ಹಾರಂಗಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ರಾಜ್ಯಶಾಸ್ತ್ರ ವಿಭಾಗ ಹಾಗೂ ಮಾನವ ಹಕ್ಕುಗಳ ಘಟಕದ ವತಿಯಿಂದ ಮಂಗಳವಾರ ಮಾನವ ಹಕ್ಕುಗಳ ಕುರಿತು ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಮಾಜದಲ್ಲಿ ಜನಾಂಗ ಧರ್ಮ, ಭಾಷೆ, ಜಾತಿ, ಲಿಂಗ ಅಥವಾ ಇನ್ನಾವುದೇ ಕಾರಣಗಳನ್ನು ಲೆಕ್ಕಿಸದೆ ಮನುಷ್ಯನಾಗಿ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಖಚಿತಪಡಿಸಿಕೊಳ್ಳಲು ಈ ಹಕ್ಕುಗಳು ಅವಶ್ಯಕ ಎಂದರು.
ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕೆ.ಪಿ.ಕುಸುಮಾ ಮಾತನಾಡಿ, ‘ಮಾನವ ಹಕ್ಕುಗಳ ಪರಿಕಲ್ಪನೆಯು ಮಾನವನ ಸಮಾನತೆಯ ಕಲ್ಪನೆಯನ್ನು ಆಧರಿಸಿದೆ. ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು ಡಿಸೆಂಬರ್ 10 ,1948 ರಂದು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಯಿತು’ ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊಫೆಸರ್ ಬಿ.ಎಂ.ಪ್ರವೀಣ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಹಕ್ಕುಗಳನ್ನು ಅರಿತು ಜವಾಬ್ದಾರಿಯುತವಾಗಿ ವರ್ತಿಸಬೇಕು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.