ADVERTISEMENT

ಲೋಕಸಭಾ ಚುನಾವಣೆ: ಈಗಿನಿಂದಲೇ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2024, 2:40 IST
Last Updated 16 ಫೆಬ್ರುವರಿ 2024, 2:40 IST
<div class="paragraphs"><p>ಮಡಿಕೇರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಪಾಲಿಸುವ ಬಗ್ಗೆ ಗುರುವಾರ ನಡೆದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. </p></div>

ಮಡಿಕೇರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಪಾಲಿಸುವ ಬಗ್ಗೆ ಗುರುವಾರ ನಡೆದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

   

ಮಡಿಕೇರಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಪಾಲಿಸುವ ಬಗ್ಗೆ ಗುರುವಾರ ನಡೆದ ತರಬೇತಿ ಕಾರ್ಯಾಗಾರದಲ್ಲಿ 165 ಅಧಿಕಾರಿಗಳು ಭಾಗವಹಿಸಿದ್ದರು. ಈ ವೇಳೆ ಮಾದರಿ ನೀತಿ ಸಂಹಿತೆ ಪಾಲಿಸುವ ಕುರಿತು, ಸಲಹೆ ಸೂಚನೆಗಳನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧಿಕಾರಿಗಳಿಗೆ ನೀಡಿದರು.

ಮುಂಬರುವ ಲೋಕಸಭಾ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು  ಸೂಚಿಸಿದರು.‌

ADVERTISEMENT

ಚುನಾವಣಾ ದಿನಾಂಕ ಪ್ರಕಟವಾಗುತ್ತಿದ್ದಂತೆ ಅಧಿಕಾರಿಗಳೆಲ್ಲರೂ ತಮಗೆ ನಿಯೋಜಿಸಿರುವ ಕ್ಷೇತ್ರ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ತೆರಳಬೇಕು. ಚೆಕ್‍ಪೋಸ್ಟ್‌ಗಳಲ್ಲಿ ತಪಾಸಣೆ ಮಾಡಬೇಕು. ಹಣ, ಮದ್ಯ ಸಿಕ್ಕಿಬಿದ್ದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಮ ಜರುಗಿಸಬೇಕು. ‘ಸಿ-ವಿಜಿಲ್’ ಆ್ಯಪ್ ಮೂಲಕವೂ ಮಾಹಿತಿ ದೊರೆಯಲಿದ್ದು, ಯಾರೂ ತಡ ಮಾಡದೆ ಆಯಾಯ ಸಂದರ್ಭದಲ್ಲಿ ಜಿಲ್ಲಾ ಚುನಾವಣಾ ವಿಭಾಗಕ್ಕೆ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಗಮನಹರಿಸಬೇಕು. ಮುಕ್ತ, ಶಾಂತಿಯುತ ಹಾಗೂ ನಿರ್ಭೀತಿಯಿಂದ ಚುನಾವಣೆ ನಡೆಸಬೇಕು ಎಂದು ಹೇಳಿದರು.

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ‘ಎಫ್‍ಎಸ್‍ಟಿ’, ‘ಎಸ್‍ಎಸ್‍ಟಿ’, ‘ವಿಎಸ್‍ಟಿ’ ಸೇರಿದಂತೆ ವಿವಿಧ ತಂಡಗಳಿಗೆ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದೂ ತಿಳಿಸಿದರು.

ಲೋಕಸಭಾ ಚುನಾವಣೆ ಘೋಷಣೆಯಾದ ಕೂಡಲೇ ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಸ್ಥಳಗಳು ಸೇರಿದಂತೆ ವಿವಿಧೆಡೆ ಅಳವಡಿಸಲಾಗಿರುವ ಜಾಹೀರಾತು, ಪ್ರಕಟಣೆ, ಬ್ಯಾನರ್‌ಗಳನ್ನು ತೆರವುಗೊಳಿಸಿ ವರದಿ ನೀಡಬೇಕು. ಚುನಾವಣಾ ಆಯೋಗದ ನಿರ್ದೇಶನವನ್ನು ಚಾಚೂ ತಪ್ಪದೇ ಅಧಿಕಾರಿಗಳು ಪಾಲಿಸಬೇಕು. ಸಂಶಯಕ್ಕೆ ಅವಕಾಶ ಮಾಡಿಕೊಡಬಾರದು. ಮಾಹಿತಿ ತಿಳಿಯದಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ‘ಚುನಾವಣೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಪೊಲೀಸರು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಿದ್ದು, ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಿದಲ್ಲಿ ಸುಗಮವಾಗಿ ಚುನಾವಣೆ ನಡೆಸಬಹುದು ಎಂದು ಹೇಳಿದರು.

ಚುನಾವಣಾ ಸಂದರ್ಭದಲ್ಲಿ ಯಾವುದೇ ರೀತಿಯ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಉಲ್ಲಂಘಿಸಿದಲ್ಲಿ ದಂಡವನ್ನು ನಿಯಮಾನುಸಾರ ವಿಧಿಸಬೇಕು ಎಂದೂ ಸೂಚಿಸಿದರು.

ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಎಫ್‍ಎಸ್‍ಟಿ, ಎಸ್‍ಎಸ್‍ಟಿ, ವಿಎಸ್‍ಟಿ ಸೇರಿದಂತೆ ವಿವಿಧ ತಂಡಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

ಮಡಿಕೇರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಪಾಲಿಸುವ ಬಗ್ಗೆ ಗುರುವಾರ ನಡೆದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಅಧಿಕಾರಿಗಳು
ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಎಸ್.ಪಿ ಸೂಚನೆ ಚುನಾವಣೆ ಘೋಷಣೆಯಾದ ಕೂಡಲೇ ಬ್ಯಾನರ್ ತೆರವಿಗೆ ನಿರ್ದೇಶನ ಎಲ್ಲರೂ ಕಟ್ಟೆಚ್ಚರದಿಂದಿರಲು ಸಲಹೆ
ಜಾತಿ ಧರ್ಮದ ಮಧ್ಯೆ ವೈಮನಸ್ಸು ಮೂಡಿಸಬಾರದು; ಎಡಿಸಿ ವೀಣಾ ಹೆಚ್ಚುವರಿ ಜಿಲ್ಲಾಧಿಕಾರಿ
ಬಿ.ಎನ್.ವೀಣಾ ಮಾತನಾಡಿ ‘ರಾಜಕೀಯ ಪಕ್ಷವಾಗಲೀ ಅಭ್ಯರ್ಥಿಗಳಾಗಲೀ ಜಾತಿ ಸಮುದಾಯ ಧರ್ಮ ಹಾಗೂ ಭಾಷೆಯನ್ನು ಸೇರಿದಂತೆ ಪರಸ್ಪರ ವೈಮನಸ್ಸು ಮೂಡಿಸುವಂತಹ ಚಟುವಟಿಕೆಗಳಲ್ಲಿ ತೊಡಗಬಾರದು ಈ ಬಗ್ಗೆ ಚುನಾವಣೆಗೆ ನಿಯೋಜಿಸಿರುವ ಅಧಿಕಾರಿಗಳು ಗಮನಹರಿಸಬೇಕು’ ಎಂದು ತಿಳಿಸಿದರು. ‘ದೇವಾಲಯ ಮಸೀದಿ ಚರ್ಚ್‍ಗಳಂತಹ ಪೂಜಾ ಸ್ಥಳಗಳನ್ನು ಚುನಾವಣಾ ಪ್ರಚಾರ ಕಾರ್ಯಕ್ಕೆ ವೇದಿಕೆಯನ್ನಾಗಿ ಬಳಸಬಾರದು ಈ ಬಗ್ಗೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು’ ಎಂದು ತಿಳಿಸಿದರು. ‘ಮತದಾರರಿಗೆ ಆಮಿಷ ಒಡ್ಡಬಾರದು. ಮತಗಟ್ಟೆ ವ್ಯಾಪ್ತಿಯ 100 ಮೀಟರ್ ಒಳಗಡೆ ಪ್ರಚಾರ ಮಾಡಬಾರದು. ಚುನಾವಣೆ ಘೋಷಣೆಯಾಗುವುದಕ್ಕೆ ಮುಂಚಿನ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಬಹುದಾಗಿದೆ. ಚುನಾವಣಾ ಪ್ರಚಾರ ಕೈಗೊಳ್ಳುವ ಬಗ್ಗೆ ಸ್ಥಳ ಮತ್ತು ಸಮಯದ ಬಗ್ಗೆ ಸ್ಥಳೀಯ ಪೊಲೀಸರಿಗೆ ಮುಂಚಿತವಾಗಿ ಮಾಹಿತಿ ನೀಡಿ ಅನುಮತಿ ಪಡೆಯಬೇಕು. ಮೆರವಣಿಗೆಗೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ಧ್ವನಿವರ್ಧಕ ಬಳಸಲು ಅನುಮತಿ ಪಡೆಯುವುದು ಮೆರವಣಿಗೆ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟು ಮಾಡಬಾರದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.