ಸಿದ್ದಾಪುರ: ‘ಕಳೆದ ಗ್ರಾಮಸಭೆಯಲ್ಲಿ ಚರ್ಚಿಸಲಾದ ಅಭಿವೃದ್ಧಿ ಕಾರ್ಯವನ್ನು ಮಾಡದೇ ಕಾಟಾಚಾರಕ್ಕೆ ಗ್ರಾಮಸಭೆ ನಡೆಸಲಾಗುತ್ತಿದೆ’ ಎಂದು ಸಿಪಿಎಂ ಕಾರ್ಯಕರ್ತರು ಗ್ರಾಮಸಭೆಯನ್ನು ಬಹಿಷ್ಕರಿಸಿ ಪ್ರತಿಭಟಿಸಿದರು.
ನೆಲ್ಯಹುದಕೇರಿ ಗ್ರಾಮ ಪಂಚಾಯಿತಿ ಗ್ರಾಮಸಭೆಯನ್ನು ಜ. 23ರಂದು ನಡೆಸಲು ತೀರ್ಮಾನಿಸಲಾಗಿತ್ತು. ‘ಈ ಹಿಂದಿನ ಗ್ರಾಮಸಭೆಯಲ್ಲಿ ಪ್ರಸ್ತಾಪ ಮಾಡಲಾದ ಕೆಲಸವನ್ನು ಪೂರ್ಣಗೊಳಿಸಿಲ್ಲ. ಕಾಟಾಚಾರಕ್ಕೆ ಗ್ರಾಮಸಭೆ ಮಾಡಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾ.ಪಂ ಆವರಣದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಮುಖಂಡ ಪಿ.ಆರ್. ಭರತ್, ‘ನೆಲ್ಯಹುದಿಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಹತ್ತಾರು ಸಮಸ್ಯೆಗಳಿವೆ. ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲದೇ ಸಾರ್ವಜನಿಕರು ಸಂಕಷ್ಟ ಎದುರಿಸುತ್ತಿದ್ದಾರೆ. ವರ್ಷಗಳಿಂದ ಶೌಚಾಲಯಕ್ಕಾಗಿ ಹೋರಾಟಗಳು ನಡೆದರೂ ಈವರೆಗೂ ಶೌಚಾಲಯ ನಿರ್ಮಿಸುವಲ್ಲಿ ಗ್ರಾ.ಪಂ ವಿಫಲವಾಗಿದೆ ಎಂದು ಆರೋಪಿಸಿದರು. ಗ್ರಾಮದ ಹಲವು ರಸ್ತೆಗಳು ದುರಸ್ತಿಯಾಗಿದೆ. ನದಿ ದಡದ ಪ್ರವಾಹ ಸಂತ್ರಸ್ತರಿಗೆ ಸೂಕ್ತ ನಿವೇಶನ ದೊರಕಿಸುವಲ್ಲಿ ಗ್ರಾಮಾಡಳಿತ ನಿರ್ಲಕ್ಷ್ಯ ವಹಿಸುತ್ತಿದೆ’ ಎಂದು ಆರೋಪಿಸಿದರು.
ಈ ಬಗ್ಗೆ ಹಲವು ಗ್ರಾಮಸಭೆಯಳಲ್ಲಿ ಚರ್ಚೆ ನಡೆದರೂ, ಈವರೆಗೂ ಸಮಸ್ಯೆ ಬಗೆಹರಿದಿಲ್ಲ. ಮುಂದಿನ ದಿನಗಳಲ್ಲಿ ಸಾರ್ವಜನಿಕರನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
ಈ ಸಂದರ್ಭ ಪಕ್ಷದ ಪ್ರಮುಖರಾದ ಚಂದ್ರ, ಎಂ.ಜಿ. ಜೋಸ್, ಟ.ಟಿ. ಉದಯ ಕುಮಾರ್, ಮುಸ್ತಫಾ, ಯುಸೂಫ್, ಮೋಣಪ್ಪ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.