ಕುಶಾಲನಗರ: ‘ಹೊಸ ಯುವ ತಂಡವೊಂದು ನಿರ್ಮಿಸಿ, ನಿರ್ದೇಶಿಸಿ ತಯಾರಿಸಿರುವ ‘ಸಂಭವಾಮಿ ಯುಗೇ ಯುಗೇ’ ಚಲನಚಿತ್ರ ಜೂನ್ 21ಕ್ಕೆ ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ’ ಎಂದು ಚಿತ್ರದ ನಿರ್ದೇಶಕ ಚೇತನ್ ಚಂದ್ರಶೇಖರ್ ಶೆಟ್ಟಿ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ಸೊಗಡಿನ ಚಿತ್ರ ಇದಾಗಿದ್ದು ಎಲ್ಲಾ ವರ್ಗದ ಪ್ರೇಕ್ಷಕರನ್ನು ರಂಜಿಸುವ ಭರವಸೆಯಿದೆ. ಕಣ್ಣು ಕಾಣದ ತಾಯಿಯೊಬ್ಬಳು ತನ್ನ ಮಕ್ಕಳ ಭವಿಷ್ಯಕ್ಕಾಗಿ ಹೋರಾಡುವ ಕಥೆಯನ್ನು ಒಳಗೊಂಡಿದೆ. ಚಿತ್ರದಲ್ಲಿ ಹಲವು ಹಿರಿಯ ಕಲಾವಿದರು ನಟಿಸಿದ್ದಾರೆ. ಕುಶಾಲನಗರದ ಪ್ರತಿಭೆ ಮಧುರಗೌಡ ನಾಯಕಿಯಾಗಿ ನಟಿಸಿದ್ದಾರೆ’ ಎಂದು ತಿಳಿಸಿದರು.
‘ಕುಟುಂಬ ಸಮೇತವಾಗಿ ನೋಡಬಹುದಾದ ಹಳ್ಳಿಗಾಡಿನ ಕಥೆ ಚಿತ್ರದಲ್ಲಿ ಅದ್ಬುತವಾಗಿ ಮೂಡಿ ಬಂದಿದೆ’ ಎಂದು ನಾಯಕ ನಟ ಜೈ ಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದರು.
‘ಹೊಸಬರು ಎನ್ನುವುದಕ್ಕಿಂತ ಚಿತ್ರವನ್ನು ಚಿತ್ರಮಂದಿರದಲ್ಲೇ ನೋಡುವ ಮೂಲಕ ಕನ್ನಡ ಚಿತ್ರರಂಗದ ಉಳಿವಿಗೆ ಸಹಕರಿಸಿ, ಕಲಾವಿದರನ್ನು ಪ್ರೋತ್ಸಾಹಿಸಿ’ ಎಂದು ಮನವಿ ಮಾಡಿದರು.
ನಾಯಕಿ ನಟಿ ಮಧುರಗೌಡ ಮಾತನಾಡಿ, ‘ಚಿತ್ರರಂಗ ನನಗೆ ಹೊಸದ್ದು. ಈ ಚಿತ್ರದಲ್ಲಿ ಹಿರಿಯ ನಟಿ ಸುಧಾರಾಣಿ ಮಗಳ ಪಾತ್ರದಲ್ಲಿ ನಟಿಸಿದ್ದೇನೆ. ಗ್ರಾಮೀಣ ಭಾಗದ ಮುಗ್ಧ ಹುಡುಗಿಯ ಪ್ರಮುಖ ಪಾತ್ರ ನನ್ನದು’ ಎನ್ನುವ ಖುಷಿಯನ್ನು ಹಂಚಿಕೊಂಡರು.
ಸುದ್ದಿಗೋಷ್ಠಿಯಲ್ಲಿ ಚಿತ್ರದ ಡಿಒಪಿ ರಾಜು ಹೆಮ್ಮಿಗೆಪುರ, ವೆಂಕಟೇಶ್ ಪ್ರಸಾದ್, ಅಭಯ್ ಪುನೀತ್, ನಾಯಕಿ ನಿಶಾ ರಜಪೂತ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.