ಕುಶಾಲನಗರ: ಸಮೀಪ ಕೂಡಿಗೆ ಕೃಷಿಫಾರಂ ಆವರಣದಲ್ಲಿರುವ ಕೊಡಗು ಸೈನಿಕ ಶಾಲೆಯಲ್ಲಿ ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಎಂಬ ಧ್ಯೇಯವಾಕ್ಯದಡಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲೆಯ ಎನ್.ಸಿ.ಸಿ ಜೆಡಿ ಘಟಕವು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಾಮೂಹಿಕವಾಗಿ ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಲಾಯಿತು.
ಉತ್ತಮ ಆರೋಗ್ಯ ರಕ್ಷಣೆ ಮತ್ತು ದೀರ್ಘಕಾಲದ ರೋಗಮುಕ್ತ ಬದುಕಿಗಾಗಿ ಯೋಗಾಸನಗಳು, ಉಸಿರಾಟದ ತಂತ್ರಗಳು, ವ್ಯಾಯಾಮಗಳು ಮತ್ತು ಧ್ಯಾನವನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು.
ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಮಾತನಾಡಿ, ‘ಯೋಗವು ಕೇವಲ ದೈಹಿಕ ವ್ಯಾಯಾಮಕ್ಕೆಷ್ಟೇ ಸೀಮಿತವಾಗಿರದೆ, ಇದು ಮನಸ್ಸು, ದೇಹ ಮತ್ತು ಚೈತನ್ಯವನ್ನು ಸಂಯೋಜಿಸುವ ಸಮಗ್ರ ಅಭ್ಯಾಸವನ್ನು ಒಳಗೊಂಡಿರುತ್ತದೆ. ನಿಯಮಿತ ಯೋಗಾಭ್ಯಾಸವು ಮಾನಸಿಕ ಒತ್ತಡ ನಿರ್ವಹಣೆಯಲ್ಲಿ ಸಹಾಯ ಮಾಡುತ್ತದೆ ಜೊತೆಗೆ ಮಾನಸಿಕ ಕೇಂದ್ರೀಕರಣಕ್ಕೆ ಸಹಕಾರಿಯಾಗಿದೆ’ ಎಂದರು.
ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್, ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪಿ. ಪ್ರಕಾಶ್ ರಾವ್, ಉಪ ಪ್ರಾಂಶುಪಾಲ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.