ಕೊಡಗು: ‘ರೋಗ ಮುಕ್ತಿಗೆ ಯೋಗ ಸಹಕಾರಿಯಾಗಿದೆ. ಯೋಗವು ಶಾರೀರಿಕ ಹಾಗೂ ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುತ್ತದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅಭಿಪ್ರಾಯಪಟ್ಟರು.
ನಗರದ ಮಹ್ಮಾತ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಆಶ್ರಯದಲ್ಲಿ 10ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ‘ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಘೋಷ ವಾಕ್ಯದೊಂದಿಗೆ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ಯೋಗ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಏಕಾಗ್ರತೆ ಸಾಧಿಸಲು ಹಾಗೂ ತಾಳ್ಮೆ ಬೆಳೆಸಿಕೊಳ್ಳಲು ಪ್ರತಿಯೊಬ್ಬರೂ ನಿತ್ಯ ಯೋಗ ಅಭ್ಯಾಸ ಮಾಡಬೇಕು. ಯೋಗವು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಧ್ಯಾನದಂತಹ ಅಭ್ಯಾಸಗಳು ಖಿನ್ನತೆಯನ್ನು ದೂರ ಮಾಡುತ್ತವೆ’ ಎಂದು ತಿಳಿಸಿದರು.
ಇದಕ್ಕೂ ಮೊದಲು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಒ ರಾಹುಲ್ ಪಾಂಡ್ವೆ ಕಾರ್ಯಕ್ರಮ ಉದ್ಘಾಟಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಕೆ.ಆರ್. ದುರುಗೇಶ್ ಮಾತನಾಡಿ, ‘ಯೋಗ ವ್ಯಕ್ತಿಯ ದೈಹಿಕ ವಿಕಾಸಕ್ಕೆ ಮಹತ್ವದ ಕೊಡುಗೆಯನ್ನು ನೀಡುತ್ತದೆ. ಯೋಗದಿಂದ ನೆಮ್ಮದಿ, ಶಾಂತಿ, ಚೈತನ್ಯ ಮತ್ತು ಆರೋಗ್ಯವು ಸದೃಢಗೊಳ್ಳುತ್ತದೆ’ ಎಂದರು.
ನಗರದ ಮಹ್ಮಾತ ಗಾಂಧಿ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಕ್ಷಕರು ವಿವಿಧ ಆಸನಗಳ ಅಭ್ಯಾಸ ಮಾಡಿಸಿದರು.
ಗಣ್ಯರು, ವಿದ್ಯಾರ್ಥಿಗಳು, ಯೋಗ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು 45 ನಿಮಿಷಗಳ ಕಾಲ ವಿವಿಧ ಆಸನಗಳಾದ ವೃಕ್ಷಾಸನ, ಪಾದಹಸ್ತಾಸನ, ತಾಡಾಸನ, ತ್ರಿಕೋನಾಸನ, ಭದ್ರಾಸನ, ವಜ್ರಾಸನ, ಉಷ್ಟ್ರಾಸನ, ಅರ್ಧ ಉಷ್ಟ್ರಾಸನ, ಶಶಾಂಕಾಸನ, ಉತ್ತಾನ, ಮಂಡೂಕಾಸನ, ವಕ್ರಾಸನ, ಮಕರಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಅರ್ಧ ಹಲಾಸನ, ಪವನಮುಕ್ತಾಸನ, ಶವಾಸನ ಅಭ್ಯಾಸ ಸೇರಿದಂತೆ ವಿವಿಧ ಯೋಗಾಸನ ಮಾಡಿಸಿದರು.
ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಸುರೇಂದ್ರ ಬಾಬು, ಡಿಡಿಪಿಐ ಕಾಳಪ್ಪ ಬಡಿಗೇರ, ಡಿಡಿಪಿಯು ಸೋಮಶೇಖರಪ್ಪ ಹೊಕ್ರಾಣಿ, ನಗರಸಭೆ ಆಯುಕ್ತ ಗುರುಸಿದ್ದಯ್ಯ ಹಿರೇಮಠ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ರಾಜಶೇಖರ ರಾಮಸ್ವಾಮಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮುಖ್ಯಸ್ಥೆ ಸ್ಮಿತಾ ಅಕ್ಕ, ಯೋಗ ಶಿಕ್ಷಕ ತಿಮ್ಮಪ್ಪ ವಡ್ಡಿಪಲ್ಲಿ, ಯೋಗ ನ್ಯಾಚೋರೋಪತಿ ವೈದ್ಯಾಧಿಕಾರಿ ಡಾ.ಪೂಜಾ ಪಾಲ್ಗೊಂಡಿದ್ದರು.
ವಿವಿಧ ಶಾಲಾ, ಕಾಲೇಜಿನ ಪ್ರಾಂಶುಪಾಲರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿವಿಧ ಯೋಗ ಸಂಸ್ಥೆಯ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.