ADVERTISEMENT

ಕೋಲಾರ ಲೋಕಸಭಾ | ಸೋಮವಾರ ಮೈತ್ರಿ ಅಭ್ಯರ್ಥಿ ಘೋಷಣೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2024, 14:10 IST
Last Updated 24 ಮಾರ್ಚ್ 2024, 14:10 IST
ಸಮೃದ್ಧಿ ಮಂಜುನಾಥ್
ಸಮೃದ್ಧಿ ಮಂಜುನಾಥ್   

ಮುಳಬಾಗಿಲು (ಕೋಲಾರ): ‘ನಾನು ಇಲ್ಲವೇ ಬಂಗಾರಪೇಟೆಯ ಮಲ್ಲೇಶ್ ಬಾಬು ಕೋಲಾರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗುವುದು ಖಚಿತ’ ಎಂದು ಶಾಸಕ ಸಮೃದ್ಧಿ ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಬೆಳಗ್ಗೆ 11ಕ್ಕೆ ನಮ್ಮಿಬ್ಬರಲ್ಲಿ ಒಬ್ಬರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ’ ಎಂದು ಶನಿವಾರ
ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

ಮಂಡ್ಯದಿಂದ ಎಚ್‌.ಡಿ. ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಲಿದ್ದಾರೆ. ಕೋಲಾರದಿಂದ ಇಬ್ಬರಲ್ಲಿ ಯಾರಿಗೇ ಟಿಕೆಟ್ ನೀಡಿದರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದರು.

ADVERTISEMENT

ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಬೆಂಬಲ ನೀಡುವಂತೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸಂಸದ ಎಸ್. ಮುನಿಸ್ವಾಮಿ ಅವರಿಗೆ ಸೂಚಿಸಿದ್ದಾರೆ. ಮುನಿಸ್ವಾಮಿ ಅವರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವುದಾಗಿ ಅವರಿಗೆ ಆಶ್ವಾಸನೆ ನೀಡಲಾಗಿದೆ ಎಂದು ಹೇಳಿದರು.

ಜೆಡಿಎಸ್‌ನಿಂದ ಸ್ಪರ್ಧೆಗೆ ಮುನಿಸ್ವಾಮಿ ಯತ್ನ? 

ಬಿಜೆಪಿಯು ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದರೂ ಆ ಪಕ್ಷದಲ್ಲಿ ಅಭ್ಯರ್ಥಿ ಯಾರು ಎಂದು ಇನ್ನೂ ತೀರ್ಮಾನಿಸಿಲ್ಲ. ಹೀಗಾಗಿ ಕೊನೆಯ ಪ್ರಯತ್ನ ಎಂಬಂತೆ ಮುನಿಸ್ವಾಮಿ ಅವರು ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುವ ಪ್ರಯತ್ನ ಮುಂದುವರಿಸಿದ್ದಾರೆ ಎಂದು ಮೂಲಗಳು ಹೇಳಿವೆ. ಈ ನಿಟ್ಟಿನಲ್ಲಿ ಶನಿವಾರ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ‘ಆ ರೀತಿ ಆಲೋಚನೆ ನನಗಿಲ್ಲ. ನಾನೀಗ ಬಿಜೆಪಿ ಸಂಸದ. ಹೀಗಾಗಿ ಪಕ್ಷದ ತೀರ್ಮಾನಕ್ಕೆ ಬದ್ಧ’ ಎಂದಷ್ಟೇ ಅವರು ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.