ಕೆಜಿಎಫ್: ಸಶಸ್ತ್ರ ಪೊಲೀಸ್ ಪೇದೆಯ ದೈಹಿಕ ಪರೀಕ್ಷೆಯನ್ನು ಜುಲೈ 8ರಂದು ನಡೆಸಲು ಪೊಲೀಸ್ ಇಲಾಖೆಯು ಸರ್ವ ತಯಾರಿ ನಡೆಸಿದೆ ಎಂದು ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದರು.
ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೆಜಿಎಫ್ ಬೆಮೆಲ್ನಗರದ ಕ್ರೀಡಾಂಗಣದಲ್ಲಿ ನಡೆಯಲಿರುವ ಸಶಸ್ತ್ರ ಪೊಲೀಸ್ ನೇಮಕಾತಿಯ ದೈಹಿಕ ಪರೀಕ್ಷೆಯು ಪಾರದರ್ಶಕ, ಗಣಕೀಕೃತ, ಸಂಪೂರ್ಣ ವಸ್ತು ನಿಷ್ಠ, ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ ನಡೆಯುತ್ತದೆ ಎಂದು ತಿಳಿಸಿದರು.
ಯಾವುದೇ ಅಭ್ಯರ್ಥಿಯು ಇಲಾಖೆಯ ಹೊರಗಾಗಲಿ ಅಥವಾ ಒಳಗಾಗಲೀ ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಥವಾ ಯಾವುದೇ ವಿಧವಾದ ಉಡುಗೊರೆ ನೀಡುವುದು ಮಾಡಬಾರದು ಹಾಗೂ ಯಾವುದೇ ವಿಧವಾದ ಹಣ ವಸೂಲಾತಿಗೆ ಯಾರಿಗೂ ಅಧಿಕಾರ ನೀಡಿರುವುದಿಲ್ಲ ಎಂದು ಅವರು ತಿಳಿಸಿದರು.
ಪರೀಕ್ಷಾ ವೇಳಾಪಟ್ಟಿ ಮತ್ತು ಕರೆ ಪತ್ರ ರವಾನೆಯ ಬಗ್ಗೆ ಹಾಗೂ ಹೆಚ್ಚಿನ ವಿವರಗಳಿಗೆ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ www.recruitment.ksp.gov.in ಅಥವಾ www.ksp.gov.in ಅನ್ನು ಅವಲೋಕಿಸಬಹುದು.
ಸಭೆಯಲ್ಲಿ ಡಿವೈಎಸ್ಪಿ ಎಸ್. ಪಾಂಡುರಂಗ, ಮುಳಬಾಗಿಲು ಡಿವೈಎಸ್ಪಿ ನಂದಕುಮಾರ್ ಮತ್ತು ಜಿಲ್ಲೆಯ ಎಲ್ಲಾ ಪೊಲೀಸ್ ಇನ್ಸ್ಪೆಕ್ಟರ್ಗಳು, ಪಿಎಸ್ಐಗಳು ಮತ್ತು ಜಿಲ್ಲಾ ಪೊಲೀಸ್ ಕಚೇರಿಯ ಅಧಿಕಾರಿ, ಸಿಬ್ಬಂದಿ ಇದ್ದರು.
ನೇಮಕಾತಿ ವಿಚಾರದಲ್ಲಿ ಮಧ್ಯವರ್ತಿಗಳ ಭರವಸೆಗಳಿಗೆ ಮಾರು ಹೋಗಬಾರದು. ಭ್ರಷ್ಟಾಚಾರದ ಬಗ್ಗೆ ಏನಾದರೂ ದೂರುಗಳಿದ್ದಲ್ಲಿ ಜಿಲ್ಲಾ ನಿಯಂತ್ರಣ ಕೇಂದ್ರದ ಮೊಬೈಲ್ ಸಂಖ್ಯೆ 94808 02700ಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.