ADVERTISEMENT

ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 15:34 IST
Last Updated 19 ಜೂನ್ 2024, 15:34 IST
ನವೀನ ಗುಳಗಣ್ಣನವರ
ನವೀನ ಗುಳಗಣ್ಣನವರ   

ಕೊಪ್ಪಳ: ‘ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್‌ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಗುರುವಾರ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ’ ಎಂದು ಪಕ್ಷದ ಜಿಲ್ಲಾಧ್ಯಕ್ಷ ನವೀನ್‌ ಗುಳಗಣ್ಣನವರ ಹೇಳಿದರು.

‘ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಮೇಲಿಂದ ಮೇಲೆ ಹೋರಾಟ ಮಾಡಲು ಯೋಜನೆಗಳನ್ನು ರೂಪಿಸಿದ್ದು ಈಗ ಜನರಿಗೆ ಹೊರೆಯಾಗಿರುವ ಇಂಧನ ಬೆಲೆ ಇಳಿಸುವಂತೆ ಪ್ರತಿಭಟನೆ ಮಾಡಲಾಗುತ್ತಿದೆ. ಮುಂದೆ ಇನ್ನಷ್ಟು ಹೋರಾಟಗಳಿಂದ ನಮ್ಮ ವಿರೋಧ ಚುರುಕುಗೊಳಿಸಲಾಗುವುದು’ ಎಂದು ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

‘ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿದ್ದು, ಇದು ಜನರ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಸರ್ಕಾರ ಜಾಗ ಮಾರಲು ಮುಂದಾಗಿದೆ. ಹಣ ಹೊಂದಿಸಲು ಸರ್ಕಾರ ಖಾಸಗಿ ಕಂಪನಿಗಳ‌ ಸಲಹೆ ಪಡೆದು, ಸರ್ಕಾರಿ ನಿವೇಶನಗಳನ್ನು ಮಾರಾಟ ಮಾಡುತ್ತಿದೆ’ ಎಂದು ಆರೋಪಿಸಿದರು.

ADVERTISEMENT

ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ ‘ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಳ್ಳತನ ಪ‍್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿದ್ದು ಇದು ಪೊಲೀಸ್‌ ಇಲಾಖೆಯ ವೈಫಲ್ಯ ತೋರಿಸುತ್ತಿದೆ. ಇನ್ನು ಮುಂದಾದರೂ ಪೊಲೀಸರು ಎಚ್ಚೆತ್ತುಕೊಳ್ಳಬೇಕು’ ಎಂದರು.

ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಬಸವರಾಜ ಕ್ಯಾವಟರ, ಬಿಜೆಪಿ ಮಾಧ್ಯಮ ಪ್ರಮುಖರಾದ  ಮಹೇಶ ಹಾದಿಮನಿ ಹಾಗೂ ಪ್ರಸಾದ ಗಾಳಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.