ಕುಷ್ಟಗಿ: ‘ನಾಗರಿಕ ಸಮಾಜಕ್ಕೆ ಕಪ್ಪುಚುಕ್ಕೆಯಾಗಿರುವ ದೇವದಾಸಿ ಪದ್ಧತಿಯನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಸಾರ್ವಜನಿಕರೂ ಸಹಕರಿಸುವ ಅಗತ್ಯವಿದೆ’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್.ಪೂಜೇರಿ ಹೇಳಿದರು.
ಪಟ್ಟಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಏರ್ಪಡಿಸಿದ್ದ ಮಾಜಿ ದೇವದಾಸಿಯರಿಗೆ ಕಾನೂನಿನ ಅರಿವು ಮತ್ತು ನೆರವು ಹಾಗೂ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
ದೇವದಾಸಿ ಪುನರ್ ವಸತಿ ಯೋಜನಾಧಿಕಾರಿ ಪೂರ್ಣಿಮಾ ಏಳುಭಾವಿ ಮಾತನಾಡಿ, ‘ಮಾಜಿ ದೇವದಾಸಿಯರಿಗೆ ಸರ್ಕಾರ ಮಾಸಾಶನ ನೀಡುತ್ತಿದ್ದು ವಸತಿ ಮತ್ತಿತರೆ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಮಾಜದ ಮುಖ್ಯವಾಹನಿಗೆ ಬರಬೇಕು. ದೇವದಾಸಿ ಪದ್ಧತಿ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು’ ಎಂದರು.
ಸರ್ಕಾರಿ ಆಸ್ಪತ್ರೆ ಮುಖ್ಯವೈದ್ಯ ಡಾ.ಕೆ.ಎಸ್.ರೆಡ್ಡಿ ಮಾತನಾಡಿದರು.
ಮಾಜಿ ದೇವದಾಸಿಯರಿಗೆ ಇದೇ ಸಂದರ್ಭದಲ್ಲಿ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಲಾಯಿತು.
ದೇವದಾಸಿ ಸಮರ್ಪಣ ನಿಷೇಧ ಕಾಯ್ದೆ ಕುರಿತು ವಕೀಲ ನಾಗರಾಜ ಮೈತ್ರಿ, ದೇವದಾಸಿ ಸಮರ್ಪಣ ನಿಷೇಧ ಕಾಯ್ದೆ ಕುರಿತು ಬಸವರಾಜ ಸಾರಥಿ ವಿಶೇಷ ಉಪನ್ಯಾಸ ನೀಡಿದರು.
ಪ್ರತಿಭಾವಂತ ವಿದ್ಯಾರ್ಥಿಗಳಾದ ರಾಜೇಶ್ವರಿ, ಶರಣಮ್ಮ, ಶಿವಕುಮಾರ ಅವರನ್ನು ಸನ್ಮಾನಿಸಲಾಯಿತು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಚೌಳಗಿ, ವಕೀಲರ ಸಂಘದ ಅಧ್ಯಕ್ಷ ವಿಜಯಮಹಾಂತೇಶ ಕುಷ್ಟಗಿ, ಸಮಾಜ ಕಲ್ಯಾಣ ಅಧಿಕಾರಿ ಬಾಲಚಂದ್ರ ಸಂಗನಾಳ, ವಕೀಲರ ಸಂಘದ ಉಪಾಧ್ಯಕ್ಷ ಶಿವಕುಮಾರ ದೊಡ್ಡಮನಿ, ಬಸವರಾಜ ಲಿಂಗಸಗೂರು, ಪರಸಪ್ಪ ಗುಜಮಾಗಡಿ, ಸಬ್ ಇನ್ಸ್ಪೆಕ್ಟರ್ ಮಾನಪ್ಪ ವಾಲ್ಮೀಕಿ, ವಿಮುಕ್ತ ದೇವದಾಸಿ ವೇದಿಕೆಯ ಚಂದಾಲಿಂಗ ಕಲಾಲಬಂಡಿ, ಕಂದಾಯ ಶಿರಸ್ತೇದಾರ ಸತೀಶ್, ಮೈನುದ್ದೀನ್, ಸಿಡಿಪಿಒ ಯಲ್ಲಮ್ಮ ಹಂಡಿ, ರೇಣುಕಾ ಮಠದ, ಸಕ್ಕೂಬಾಯಿ, ವೆಂಕಟೇಶ ಹೊಸಮನಿ, ದಾದೇಸಾಹೇಬ್ ಹಿರೇಮನಿ, ಮರಿಯಪ್ಪ ಮಳ್ಳೂರು ಸೇರಿದಂತೆ ವಕೀಲರು, ಮಾಜಿ ದೇವದಾಸಿಯರು, ಅಂಗನವಾಡಿ ಮೇಲ್ವಿಚಾರಕಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.