ಕನಕಗಿರಿ: ‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡುವುದಾಗಿ ನೀಡಿದ ಭರವಸೆಯನ್ನು ಈಡೇರಿಸುವ ಬದಲಾಗಿ ಸುಳ್ಳು ಹೇಳಿ ಕಾಲಹರಣ ಮಾಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ದೂರಿದರು.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಪಕ್ಷದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು,‘ಸುಳ್ಳು ಹೇಳುವುದು, ಜಾತಿ ಮತ್ತು ಧರ್ಮಗಳ ಮಧ್ಯೆ ಜಗಳ ಹಚ್ಚಿ ರಾಜಕೀಯ ಲಾಭ ಪಡೆಯುವುದು ಮಾತ್ರ ಬಿಜೆಪಿಗೆ ಗೊತ್ತಿದೆ. ಸರ್ವರಿಗೆ ಸಮಬಾಳು, ಸಮಪಾಲು ತತ್ವ ಕಾಂಗ್ರೆಸ್ನಲ್ಲಿ ಮಾತ್ರ ಇದೆ ಬಿಜೆಪಿಗರ ಬಣ್ಣದ ಮಾತುಗಳಿಗೆ ಮಾರು ಹೋಗದೆ ಕಾಂಗ್ರೆಸ್ ಬೆಂಬಲಿಸಬೇಕು’ ಎಂದು ಕೋರಿದರು.
‘ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಗೆಲ್ಲುವುದು ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದ ಅವರು, ಅಭ್ಯರ್ಥಿ ಪರ ಪ್ರಚಾರಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಬರಲಿದ್ದಾರೆ. ಇದೇ 30ರಂದು ಸಿಎಂ ಅವರು ಗಂಗಾವತಿ, ಮೇ 1ರಂದು ಕುಷ್ಟಗಿಗೆ ಬರಲಿದ್ದಾರೆ’ ಎಂದು ಹೇಳಿದರು.
ಏ.16ರಂದು ರಾಜಶೇಖರ ಹಿಟ್ನಾಳ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಪ್ರತಿಯೊಬ್ಬರು ಭಾಗವಹಿಸಬೇಕೆಂದು ಕೋರಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾಧರಸ್ವಾಮಿ ಕಲ್ಲಬಾಗಿಲಮಠ, ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ, ವಕ್ತಾರ ಶರಣಬಸಪ್ಪ ಭತ್ತದ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರೇಶ ಸಮಗಂಡಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಸಂತಗೌಡ ಪಾಟೀಲ, ಮಲ್ಲಿಕಾರ್ಜುನ ಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ವಿರುಪಣ್ಣ ಕಲ್ಲೂರು, ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಶಿವರೆಡ್ಡಿ ಖ್ಯಾಡೆದ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಸುದರ್ಶನರೆಡ್ಡಿ, ನಗರ ಘಟಕದ ಅಧ್ಯಕ್ಷ ರವಿ ಪಾಟೀಲ, ಪ್ರಮುಖರಾದ ನವಲಿ ಸಿದ್ದನಗೌಡ ಪಾಟೀಲ, ನಿರುಪಾದಿ ಗುರುವಿನ್, ಶರಣೆಗೌಡ, ಪಟ್ಟಣ ಪಂಚಾಯಿತಿ ಸದಸ್ಯರಾದ ಅನಿಲಕುಮಾರ ಬಿಜ್ಜಳ, ರಾಜಾಸಾಬ ನಂದಾಪುರ, ಶರಣೆಗೌಡ ಪಾಟೀಲ, ರಾಕೇಶ ಕಂಪ್ಲಿ, ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.