ಕನಕಗಿರಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ವಿಶ್ವನಾಥ ಮುರುಡಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಸಂಘದ ಅಧ್ಯಕ್ಷೆ ಶಂಶಾದಬೇಗಂ ಮಾತನಾಡಿ,‘ಲೋಕಸಭಾ ಚುನಾವಣೆಯ ಕರ್ತವ್ಯದ ಸಮಯದಲ್ಲಿ ಶಿಕ್ಷಕರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ
55 ವರ್ಷ ಹೊಂದಿದ ಹಾಗೂ ಚಿಕ್ಕ ಮಕ್ಕಳನ್ನು ಹೊಂದಿರುವ ಮತ್ತು ವಿವಿಧ ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಶಿಕ್ಷಕರು ಹಾಗೂ ನೌಕರರಿಗೆ ಚುನಾವಣೆಯಲ್ಲಿ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿಕೊಂಡರು.
ಗರ್ಭಿಣಿಯರು, ಅಂಗವಿಕಲರು ಹಾಗೂ ಮಹಿಳಾ ಶಿಕ್ಷಕರನ್ನು ಕೆಲಸದಿಂದ ಕೈಬಿಡಬೇಕು ಎಂದು ಕೋರಿದರು. ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಶಿಕ್ಷಕರಿಗೆ ಬಸ್, ವಸತಿ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ತಹಶೀಲ್ದಾರ್ ವಿಶ್ವನಾಥ ಮುರುಡಿ ಸಂಘದ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು.
ಶಿಕ್ಷಕರ ಸಂಘದ ಗೌರವ ಅಧ್ಯಕ್ಷ ಶೇಖರಯ್ಯ ಕಲ್ಮಠ, ಉಪಾಧ್ಯಕ್ಷೆ ಜ್ಯೋತಿ ಭತ್ತದ, ಸಂಘಟನಾ ಕಾರ್ಯದರ್ಶಿ ಜಗದೀಶ ಟಿ.ಎಸ್, ನಿರ್ದೇಶಕ ತಿಪ್ಪೇಶ, ಮಲ್ಲಿಕಾರ್ಜುನ ಕುಷ್ಟಗಿ, ವಿಮಲಾಬಾಯಿ ಜೋಷಿ, ಗೀತಾ ಹಂಚಾಟೆ, ರೇಣುಕಾ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.