ADVERTISEMENT

ಬೆಳೆ ನಷ್ಟ ಪರಿಹಾರಕ್ಕೆ ರೈತರ ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2023, 16:05 IST
Last Updated 22 ನವೆಂಬರ್ 2023, 16:05 IST
ಬೆಳೆ ಹಾನಿಗೆ ಅಗತ್ಯ ಪರಿಹಾರ, ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ರೈತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು
ಬೆಳೆ ಹಾನಿಗೆ ಅಗತ್ಯ ಪರಿಹಾರ, ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ರೈತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು   

ಕಾರಟಗಿ: ಸಕಾಲಕ್ಕೆ ಹಾಗೂ ನಿರಂತರವಾಗಿ ನಾಲೆಯ ನೀರು ಬಾರದೇ, ಮಳೆಯೂ ಆಗದೇ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಈಗಾಗಲೇ ಸರ್ವೆ ನಡೆಸಿದ್ದರೂ ರೈತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. ತಕ್ಷಣ ಬೆಳೆ ನಷ್ಟಕ್ಕೆ ಪರಿಹಾರ ನೀಡಬೇಕು ಹಾಗೂ ಬೆಳೆ ವಿಮೆ ಪರಿಹಾರ ಬರುವಂತೆ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಮಂಗಳವಾರ ತಹಶೀಲ್ದಾರ್‌ ಹಾಗೂ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಮೆಕ್ಕೆಜೋಳ, ಕಡಲೆ, ಸೂರ್ಯಕಾಂತಿ, ಹತ್ತಿ, ಜೋಳ ಮೊದಲಾದ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಸರ್ಕಾರ ಬರ ಪೀಡಿತ ತಾಲ್ಲೂಕು ಎಂದು ಘೋಷಿಸಿದ್ದರೂ, ನಯಾ ಪೈಸೆ ಬಂದಿಲ್ಲ ತಕ್ಷಣ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಪ್ರತಿಭಟನಾ ರೈತರು ಆಕ್ರೋಶ ಹೊರಹಾಕಿದರು.

ಮುಖಂಡರಾದ ಶರಣೇಗೌಡ ಯರಡೋಣ, ಶರಣಪ್ಪ ಗದ್ದಿ ಮಾತನಾಡಿ, ಆಡಳಿತ ವ್ಯವಸ್ಥೆಯು ರೈತರ ಬಗ್ಗೆ ಉದಾಸೀನತೆ ತೋರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ರೈತರ ನೆರವಿಗೆ ಜಿಲ್ಲಾಡಳಿತ ಬರಬೇಕು ಎಂದರು.

ADVERTISEMENT

ಮನವಿ ಸ್ವೀಕರಿಸಿದ ತಹಶೀಲ್ದಾರ್‌ ಎಂ. ಕುಮಾರಸ್ವಾಮಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಪಟ್ಟದಕಲ್‌ ಪ್ರತಿಕ್ರಿಯಿಸಿ, ಜಿಲ್ಲಾಧಿಕಾರಿಗಳ ಬಳಿ ರೈತರ ಬೇಡಿಕೆಗಳನ್ನು ಮಂಡಿಸಿ, ಸೂಕ್ತ ಪರಿಹಾರ ದೊರಕಿಸುವ ಭರವಸೆ ನೀಡಿದರು.

ಬೂದಗುಂಪಾ, ತಿಮ್ಮಾಪುರ, ಹಾಲಸಮುದ್ರ ಗ್ರಾಮದ ಅನೇಕ ರೈತರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.