ಕುಕನೂರು: ‘ರೈತರು ಸರ್ಕಾರದ ಯೋಜನೆಗಳಿಗೆ ಸಹಕಾರ ನೀಡಿ ಸಹಕರಿಸಿ’ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ತಾಲ್ಲೂಕಿನ ಮಂಗಳೂರು, ಶಿರೂರು, ಬಳಗೇರಿ, ರಾಜೂರು ಸಂಗನಾಳ ಗ್ರಾಮಗಳಲ್ಲಿ ಕೆರೆ ತುಂಬಿಸುವ ಯೋಜನೆಗೆ ರೈತರಲ್ಲಿ ಜಮೀನು ನೀಡುವಂತೆ ಮನವಿ ಮಾಡಿ ಮಾತನಾಡಿದರು.
‘ತಾಲ್ಲೂಕುಗಳ ಬಹುತೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದ್ದು, ಈ ಸಮಸ್ಯೆ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದ್ದರಿಂದಾಗಿ ಎರಡೂ ತಾಲ್ಲೂಕಿನಲ್ಲಿ ಕುಡಿಯುವ ನೀರು ಹಾಗೂ ಅಂತರ್ಜಲ ಅಭಿವೃದ್ಧಿಗಾಗಿ ಆಯವ್ಯಯದಲ್ಲಿ ₹970 ಕೋಟಿ ಅನುದಾನ ಘೋಷಿಸಲಾಗಿದೆ’ ಎಂದರು.
‘38 ಕೆರೆ ತುಂಬಿಸುವ ಯೋಜನೆಗೆ ಕನಿಷ್ಟ 50 ಎಕರೆಗಿಂತ ಹೆಚ್ಚಿಗೆ ಜಮೀನು ಪ್ರತಿಯೊಂದು ಗ್ರಾಮದಲ್ಲಿ ಬೇಕಾಗಿದ್ದು, ಜಮೀನುಗಳನ್ನು ಸರ್ಕಾರ ನಿಗದಿಪಡಿಸಿದ ದರದಲ್ಲಿ ಖರೀದಿಸಲಾಗುವುದು. ಈ ಯೋಜನೆ ಸಾಕಾರಗೊಂಡಲ್ಲಿ ಈ ಭಾಗದಲ್ಲಿ ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ತಪ್ಪಲಿದೆ. ಹೀಗಾಗಿ ಗ್ರಾಮಸ್ಥರು ಸಹಕರಿಸಿ ಸಾರ್ವಜನಿಕ ಅನುಕೂಲಕ್ಕಾಗಿ ಜಮೀನು ನೀಡಲು ಮುಂದೆ ಬರಬೇಕು’ ಎಂದು ಮನವಿ ಮಾಡಿದರು.
ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ ಮುಖ್ಯ ಎಂಜಿನಿಯರ್ ಮಂಜುನಾಥ ಮಾತನಾಡಿ, ‘ಕೆರೆ ತುಂಬಿಸುವ ಈ ಯೋಜನೆಯು ರಾಜ್ಯದಲ್ಲಿಯೇ ಹೊಸದು. ರಾಯರಡ್ಡಿ ಅವರು ತಮ್ಮ ಕ್ಷೇತ್ರದ ಜನರ ಅನುಕೂಲಕ್ಕಾಗಿ ಯೋಜನೆಯ ಅನುಷ್ಠಾನಕ್ಕೆ ಶ್ರಮಿಸುತ್ತಿದ್ದು, ಜನರು ಸಹಕರಿಸಬೇಕು. ಇದೊಂದು ಐತಿಹಾಸಿಕ ಯೋಜನೆಯಾಗಿದ್ದು, ಸಾರ್ವಜನಿಕರು ಕೆರೆಗಳ ನಿರ್ಮಾಣಕ್ಕೆ ಜಮೀನು ನೀಡಲು ಮುಂದೆ ಬರಬೇಕು’ ಎಂದು ತಿಳಿಸಿದರು.
ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಶೀಲ್ದಾರ್ ಪ್ರಾಣೇಶ್, ಸಂತೋಷ ಬಿರಾದಾರ, ಗುತ್ತಿಗೆದಾರ, ಹನುಮಂತಗೌಡ ಚಂಡೂರು, ವೀರನಗೌಡ ಬಳೂಟಗಿ, ಯಂಕಣ್ಣ ಯರಾಶಿ, ಸಂಗಮೇಶ ಗುತ್ತಿ, ಮಂಜುನಾಥ ಕಡೇಮನಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.