ಕನಕಗಿರಿ: ಕ್ಷೇತ್ರದ ನವಲಿ ಗ್ರಾಮಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾಗಿದ್ದು ಕಟ್ಟಡ ನಿರ್ಮಾಣಕ್ಕೆ ₹22 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ಸಮೀಪದ ನವಲಿ ಗ್ರಾಮದ ರೈಸ್ ಟೆಕ್ನಾಲಜಿ ಪಾರ್ಕ್ ಪರಿಸರಸಲ್ಲಿ ಭಾನುವಾರ ಸ್ಥಳ ಪರಿಶೀಲಿಸಿ ಅವರು ಮಾತನಾಡಿದರು.
ಕಟ್ಟಡ ನಿರ್ಮಾಣ ಮಾಡಲು ಟೆಂಡರ್ ಕರೆಯಲಾಗಿದ್ದು ವಾರದೊಳಗೆ ಪ್ರಕ್ರಿಯೆ ಮುಗಿಯಲಿದೆ. ಶೀಘ್ರದಲ್ಲಿಯೇ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಪ್ರತಿಕ್ರಿಯೆ ನೀಡಿದರು.
ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯಗಳನ್ನು ಕ್ಷೇತ್ರದಲ್ಲಿ ಮತ್ತಷ್ಟು ಆರಂಭವಾಗಲಿವೆ ಎಂದು ತಿಳಿಸಿದರು.
ಚುನಾವಣೆಯಲ್ಲಿ ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಕಾಂಗ್ರೆಸ್ ನುಡಿದಂತೆ ನಡೆಯುವ ಸರ್ಕಾರವಾಗಿದೆ. ಬಿಜೆಪಿಯವರಂತೆ ಸುಳ್ಳು ಭರವಸೆಯನ್ನು ಕಾಂಗ್ರೆಸ್ ಎಂದಿಗೂ ನೀಡಲ್ಲ ಎಂದು ಹೇಳಿದರು.
ತಹಶೀಲ್ದಾರ್ ವಿಶ್ವನಾಥ ಮುರುಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲ್ಲಬಾಗಿಲಮಠ, ಪ್ರಮುಖರಾದ ವೀರೇಶ ಸಮಗಂಡಿ, ವಿರುಪಣ್ಣ ಕಲ್ಲೂರು, ಗಂಗಾಧರಗೌಡ ಪಾಟೀಲ, ಶಿವರೆಡ್ಡಿ ಖ್ಯಾಡೆದ, ಹುಲಗಪ್ಪ ವಾಲೇಕಾರ, ಜಡಿಯಪ್ಪ ಭೋವಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.