ADVERTISEMENT

ನೀಟ್ ಹಗರಣ: ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಜೂನ್ 2024, 6:52 IST
Last Updated 13 ಜೂನ್ 2024, 6:52 IST
ಕೊಪ್ಪಳ ನಗರದಲ್ಲಿ ಬುಧವಾರ ಎಐಡಿಎಸ್‍ಒ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು
ಕೊಪ್ಪಳ ನಗರದಲ್ಲಿ ಬುಧವಾರ ಎಐಡಿಎಸ್‍ಒ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು   

ಕೊಪ್ಪಳ: ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸೂಕ್ತ ತನಿಖೆ ನಡೆಸಿ ಅರ್ಹ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುವುದು ಹಾಗೂ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಎಐಡಿಎಸ್‍ಒ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಗರದ ಹಳೆ ಬಸ್ ನಿಲ್ದಾಣದಿಂದ ಅಶೋಕ ವೃತ್ತದವರೆಗೆ ಪ್ರತಿಭಟನೆ ರ‍್ಯಾಲಿ ನಡೆಸಿ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಪ್ರತಿಭಾವಂತರಿಗೆ ನ್ಯಾಯ ಕೊಡಬೇಕು ಎಂದು ಆಗ್ರಹಿಸಿದರು.

ನೇತೃತ್ವ ವಹಿಸಿದ್ದ ಸಂಘಟನೆ ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ತುಳಜಾರಾಮ ಎನ್.ಕೆ. ಮಾತನಾಡಿ, ವೈದ್ಯಕೀಯ ಶಿಕ್ಷಣವು ಈಗ ವ್ಯಾಪಾರದ ಸರಕು ಆದಂತಿದೆ. ಬಡವರಿಗೆ, ಮಧ್ಯಮ ವರ್ಗದವರಿಗೆ ವೈದ್ಯಕೀಯ ಶಿಕ್ಷಣ ಪಡೆಯುವುದು ಗಮನಕುಸುಮವಾದಂತಿದೆ. ಸರ್ಕಾರದ ಅವ್ಯವಸ್ಥೆ ಮತ್ತು ಭ್ರಷ್ಟಾಚಾರದ ಪರಿಣಾಮ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭೆಯು ವ್ಯರ್ಥವಾಗಿ ಹೋಗುತ್ತಿದೆ. ಹಗಲಿರುಳು ಕಷ್ಟಪಟ್ಟು ಶ್ರಮವಹಿಸಿ ಅಭ್ಯಾಸ ಮಾಡಿ ನೀಟ್ ಪರೀಕ್ಷೆ ಬರದವರಿಗೆ ಅನ್ಯಾಯವಾಗಿದೆ. ಇದು ಶಿಕ್ಷಣ ಕ್ಷೇತ್ರದಲ್ಲಿ ಕಾಣಿಸಿಕೊಂಡಿರುವ ಬಹು ದೊಡ್ಡ ಹಗರಣವಾಗಿದೆ. ಕೂಡಲೇ ಉನ್ನತ ಮಟ್ಟದ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಸಂಘಟನೆ ನಿರಂತರವಾಗಿ ಹೋರಾಡಲಿದೆ ಎಂದರು.

ADVERTISEMENT

ನಿಮಮವಳಿಗಳನ್ನು ಗಾಳಿಗೆ ತೂರಿ ಫಲಿತಾಂಶ ಪ್ರಕಟಿಸಲಾಗಿದೆ. ಅಲ್ಲದೇ ಒಂದೇ ಕೊಠಡಿಯಲ್ಲಿ ಬರೆದ ವಿದ್ಯಾರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದಾರೆ. ಹೀಗೆ ಒಂದೇ ರೀತಿಯಲ್ಲಿ ಅಂಕಗಳು ಬರಲು ಯಾವ ವಾಮಮಾರ್ಗವನ್ನು ಅನುಸಿರಿಸಿ ಅಕ್ರಮವ್ಯಸಗಿದ್ದಾರೆ ಎಂಬುದನ್ನು ತನಿಖೆಯ ಮೂಲಕವೇ ಬಹಿರಂಗಪಡಿಸಬೇಕಾಗಿದೆ. ನೀಟ್ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಕೊಡುವ ಉದ್ದೇಶದಿಂದಲೇ ವಿದ್ಯಾರ್ಥಿಗಳಿಂದ ಸಾಕಷ್ಟು ಹಣವನ್ನು ಪಡೆದುಕೊಂಡಿದ್ದಾರೆ ಎಂದು ತುಳಜಾರಾಮ್ ಆರೋಪಿಸಿದ್ದಾರೆ.

ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಮಾತನಾಡಿ, ಸರ್ಕಾರದ ನಿಷ್ಕಾಳಜಿ ಮತ್ತು ಅವೈಜ್ಞಾನಿಕ ಪರೀಕ್ಷಾ ವ್ಯವಸ್ಥೆ ಮತ್ತು ಶಿಕ್ಷಣವು ಸಂಪೂರ್ಣ ವ್ಯಾಪಾರಿಕರಣ ವಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ಗುಣಮಟ್ಟದಲ್ಲಿ ಕುಸಿತ ಕಾಣುತ್ತಿದೆ. ಇದರ ಪರಿಣಾಮ ಅಮಾಯಕ ವಿದ್ಯಾರ್ಥಿಗಳು ತೊಂದರೆ ಅನುಭವಿಸುವುದರ ಜೊತೆಗೆ ಬಲಿಪಶುಗಳಾಗುತ್ತಿದ್ದಾರೆ ಎಂದರು.

ಸದಸ್ಯರಾದ ಪ್ರದೀಪ್, ಸುಜಾತ, ರಾಹುಲ್, ಬಸವರಾಜ್, ಅರುಂಧತಿ, ಸಕ್ರಮ್ಮ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.