ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಸಂಸದ ಸಂಗಣ್ಣ ಕರಡಿ ಅವರನ್ನು ಭೇಟಿಯಾಗಲು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ನಗರಕ್ಕೆ ಭೇಟಿ ನೀಡಿದ್ದಾರೆ.
ಗುರುವಾರ ರಾತ್ರಿ ಸಂಸದರ ನಿವಾಸಕ್ಕೆ ಬಂದ ಅವರನ್ನು ಸಂಗಣ್ಣ ಕರಡಿ ಬರಮಾಡಿಕೊಂಡು ಸ್ವಾಗತ ಕೋರಿದರು. ಬಳಿಕ ಸಂಗಣ್ಣ ಜೊತೆ ರವಿಕುಮಾರ್ ಗೌಪ್ಯವಾಗಿ ಮಾತುಕತೆ ನಡೆಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಣಗಣ್ಣನವರ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ ಹಲವರು ಇದ್ದರು.
ದಿಢೀರ್ ಕೊಪ್ಪಳ ಭೇಟಿ ವಿಶೇಷ ಎನು ಎನ್ನುವ ಪ್ರಶ್ನೆಗೆ ರವಿಕುಮಾರ್ ನಕ್ಕು ಸುಮ್ಮನಾದರು.
ಸತತ ಎರಡು ಬಾರಿ ಸಂಸದನಾಗಿ ಉತ್ತಮ ಕೆಲಸ ಮಾಡಿದರೂ ಪಕ್ಷ ಟಿಕೆಟ್ ನೀಡಿಲ್ಲ ಎಂದು ರಾಜ್ಯ ನಾಯಕರ ವಿರುದ್ಧ ಸಂಗಣ್ಣ ವಾಗ್ದಾಳಿ ನಡೆಸಿದ್ದರು. ಬೆಳಿಗ್ಗೆ ಬೆಂಬಲಿಗರ ಹಾಗೂ ಅಭಿಮಾನಿಗಳ ಸ್ವಾಭಿಮಾನಿ ಸಮಾವೇಶ ನಡೆಸಿ ನಾಲ್ಕು ದಿನ ಕಾದು ನೋಡುವುದಾಗಿ ಹೇಳಿದ್ದಾರೆ. ಈ ಎಲ್ಲ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ರವಿಕುಮಾರ್ ಪಕ್ಷದ ವರಿಷ್ಠರ ಸೂಚನೆ ಮೇರೆಗೆ ದಿಢೀರ್ ಸಂಸದರ ನಿವಾಸಕ್ಕೆ ಭೇಟಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.