ಮದ್ದೂರು: ಪಟ್ಟಣದ ಟಿ ಬಿ ವೃತ್ತದ ಬಳಿ ಶನಿವಾರ ರಾತ್ರಿ ಲಾರಿ ಹಾಗೂ ಬೈಕ್ ಡಿಕ್ಕಿ ನಡುವೆ ಸಂಭವಿಸಿದ ಅಪಘಾತದಲ್ಲಿ ತಾಲೂಕಿನ ಬೆಸಗರಹಳ್ಳಿ ಗ್ರಾಮದ ಲೇಟ್ ಆರ್.ಮುರುಗನ್ ಅವರ ಪುತ್ರ, ಪತ್ರಕರ್ತ ಬಿ.ಎ. ಮಧುಕುಮಾರ್ (32) ಮೃತಪಟ್ಟಿದ್ದಾರೆ.
ಮಳವಳ್ಳಿ ಮಾರ್ಗದ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ತೀವ್ರವಾಗಿ ಅಸ್ವಸ್ಥಗೊಂಡ ಮಧುಕುಮಾರ್ ಅವರನ್ನು ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ತಡರಾತ್ರಿ ಮೃತಪಟ್ಟಿದ್ದಾರೆ.
ಮೃತರ ಸಹೋದರ ನೀಡಿದ ದೂರಿನ ಮೇರೆಗೆ ಪಟ್ಟಣದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾನುವಾರ ಸ್ವಗ್ರಾಮ ಬೆಸಗರಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿತು. ಮಧುಕುಮಾರ್ ಅವರಿಗೆ ಪತ್ನಿ ದೀಪಾ ಹಾಗೂ 4 ವರ್ಷದ ಪ್ರಬುದ್ಧ ಎಂಬ ಪುತ್ರ ಇದ್ದಾರೆ.
ಶಾಸಕ ಕೆ.ಎಂ.ಉದಯ್, ಮಾಜಿ ಸಚಿವ ಡಿ.ಸಿ. ತಮ್ಮಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ರೈತ ಸಂಘಟನೆ ಹಾಗೂ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಹಾಗೂ ಇನ್ನಿತರ ಸಂಘ ಸಂಸ್ಥೆಯ ಪದಾಧಿಕಾರಿಗಳು ಮೃತರ ಅಂತಿಮ ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.