ಪ್ರಜಾವಾಣಿ ವಾರ್ತೆ
ನಾಗಮಂಗಲ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಶ್ರೀರಾಮನಹಳ್ಳಿ ಗೇಟ್ ಬಳಿ ಬುಧವಾರ ರಾತ್ರಿ ನಡೆದ ಕಾರು ಮತ್ತು ಕ್ಯಾಂಟರ್ ನಡುವಿನ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮೃತಪಟ್ಟರು.
ಹೊಳಲ್ಕೆರೆ ತಾಲ್ಲೂಕಿನ ಹಿರೇಹೆಮ್ಮಿಗನೂರಿನ ಸಿದ್ದೇಶ್ (38), ಅರಸಿನಘಟ್ಟದ ಯುವರಾಜ್(55), ಮುದುಕದೂರು ತಿಪ್ಪೇಶ್ (58) ಮೃತರು.
ಕಾರಿನಲ್ಲಿದ್ದ ದರ್ಶನ್, ನಟರಾಜ್, ವಿಜಯ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರನ್ನು ಬೆಂಗಳೂರು ಆಸ್ಪತ್ರೆಗೆ, ಇನ್ನಿಬ್ಬರನ್ನು ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವ್ಯಕ್ತಿಯೊಬ್ಬರಿಗೆ ಚಿಕಿತ್ಸೆ ಕೊಡಿಸಲು ಆರು ಮಂದಿ ಹೊಳಲ್ಕೆರೆಯಿಂದ ಮೈಸೂರಿನ ಕಡೆಗೆ ಬರುತ್ತಿದ್ದಾಗ ಕ್ಯಾಂಟರ್ ಡಿಕ್ಕಿಯಾಗಿದೆ. ಮೃತ ಮೂವರು ಪಡಿತರ ವಿತರಕರ ಸಂಘದ ಕಾರ್ಯದರ್ಶಿಗಳಾಗಿದ್ದರು ಎನ್ನಲಾಗಿದೆ.
ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹಗಳನ್ನು ನೀಡಲಾಯಿತು. ಸ್ಥಳದಲ್ಲಿ ಕುಟುಂಬಸ್ಥರ ರೋದನ ಮುಗಿಲು ಮುಟ್ಟುವಂತಿತ್ತು. ರಾಜ್ಯ ಪಡಿತರ ವಿತರಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ.ಕೃಷ್ಣಪ್ಪ ಸಾಂತ್ವನ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.