ನಾಗಮಂಗಲ: ‘ಅಹಿಂಸಾತ್ಮಕ ಮಾರ್ಗದಲ್ಲಿ ಸ್ವಾತಂತ್ರ್ಯ ಹೋರಾಟ ಮಾಡುವ ಮೂಲಕ ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಗಾಂಧೀಜಿ. ಅವರ ತತ್ವ ಸಿದ್ಧಾಂತಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಬದುಕಬೇಕಿದೆ’ ಎಂದು ಮುಖ್ಯ ಶಿಕ್ಷಕ ಜಗನ್ನಾಥ್ ಹೇಳಿದರು.
ತಾಲ್ಲೂಕಿನ ಪಿ.ನೇರಲೆಕೆರೆ ಪ್ರೌಢಶಾಲೆಯಲ್ಲಿ ಮಂಗಳವಾರ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
‘ಗಾಂಧೀಜಿ ಅವರ ಪ್ರಾಣತ್ಯಾಗ ಮಾಡಿದ ದಿನವನ್ನು ಹುತಾತ್ಮರ ದಿನವಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಮಡಿದ ಎಲ್ಲಾ ಹುತಾತ್ಮರನ್ನು ಸ್ಮರಿಸಿಕೊಳ್ಳುವ ದಿನವಾಗಿದೆ.ದೇಶ ಅಭಿವೃದ್ಧಿಯಾಗಬೇಕಾದರೆ ಗ್ರಾಮಗಳು ಅಭಿವೃದ್ಧಿಯಾಗಬೇಕು ಎಂದು ಕನಸು ಕಂಡಿದ್ದವರು. ಅವರ ಜೀವನವೇ ನಮ್ಮೆಲ್ಲರಿಗೂ ನಿಜವಾದ ಸಂದೇಶವಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಾದ ನೀವು ಗಾಂಧೀಜಿ ಅವರ ತತ್ವ ಮತ್ತು ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಬದುಕಬೇಕು’ ಎಂದರು.
ನಂತರ ಶಿಕ್ಷಕ ರಮೇಶ್ ಮಾತನಾಡಿ, ‘ಗಾಂಧೀಜಿ ಅವರ ಜೀವನದ ಪ್ರಮುಖ ಅಂಶಗಳನ್ನು ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳು ಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಶಹಾಬುದ್ದೀನ್ ಡಿ.ಬಣಕಾರ್, ವೆಂಕಟೇಶ್ ರಾವ್, ಶ್ರೀನಿವಾಸಯ್ಯ, ವಿನಯ್ ಕುಮಾರ್ ಮತ್ತು ವಿದ್ಯಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.