ಮಂಡ್ಯ: ಇಲ್ಲಿನ ಕೆಆರ್ಎಸ್ ಅಣೆಕಟ್ಟೆ ಭರ್ತಿಯಾಗಿದ್ದು,(ಗರಿಷ್ಠ ಮಟ್ಟ 124.80 ಅಡಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ಜುಲೈ 29)ರಂದು ಬೆಳಿಗ್ಗೆ 10.30ಕ್ಕೆ ಬಾಗಿನ ಅರ್ಪಿಸಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಕೆಆರ್ಎಸ್ ಅಣೆಕಟ್ಟೆ ಬಳಿ ಇರುವ ಕಾವೇರಿ ಮಾತೆಗೆ ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಿದ್ದಾರೆ.
ಬೃಂದಾವನ ಉದ್ಯಾನದಲ್ಲಿ ಶಾಮಿಯಾನ ಹಾಕಿ ತಳಿರು ತೋರಣಗಳಿಂದ ಸಿಂಗರಿಸಲಾಗಿದೆ.
ಜಲಾಶಯದ ಕೆಳ ಭಾಗದಲ್ಲಿರುವ ಕಾವೇರಿ ಮಾತೆ ಪ್ರತಿಮೆ ಬಳಿ ವಿಶೇಷ ಪೂಜೆ ಸಲ್ಲಿಸಲು ಸಕಲ ಸಿದ್ಧತೆ ಮಾಡಲಾಗಿದೆ.
ಪೂಜಾ ಸ್ಥಳವನ್ನು ತಳಿರು ತೋರಣ ಹಾಗೂ ವಿಶೇಷ ಹೂವುಗಳಿಂದ ಅಲಂಕರಿಸಿದ್ದು, ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಮೈಸೂರು ಜಂಗಲ್ ಲಾಡ್ಜ್ ಅಧ್ಯಕ್ಷ ಸಿ.ಅನಿಲ್ಕುಮಾರ್, ಶಾಸಕ ಎ.ಬಿ. ರಮೇಶ ಬಂಡಿಸಿದ್ದೇಗೌಡ, ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸುನೀಲ್ ಬೋಸ್ ಸೇರಿದಂತೆ ಮಂಡ್ಯ ಮತ್ತು ಮೈಸೂರು ಜಿಲ್ಲೆಯ ಶಾಸಕರು, ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಮುಖ್ಯಮಂತ್ರಿ ಹಾಗೂ ಸಂಪುಟ ಸಹೋದ್ಯೋಗಿಗಳನ್ನು ಹೊರತುಪಡಿಸಿ ಕಾರ್ಯಕರ್ತರು ಮತ್ತು ಇತರರಿಗೆ ಅಣೆಕಟ್ಟೆಯ ಮೇಲ್ಭಾಗಕ್ಕೆ ಪ್ರವೇಶ ನಿಷೇಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.